ಮದ್ದೂರು: ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯಾತ್ ರಾಜ್ ಅಧಿನಿಯಮ 1993ರ ಪ್ರಕರಣಗಳಿಗೆ ತಿದ್ದುಪಡಿ ಮತ್ತು ಗ್ರಾಮ ಪಂಚಾಯಿತಿ ನೌಕರರ ಸೇವಾ ವಿಷಯಗಳಿಗೆ ಸಂಬಂಧಿಸಿದ ನಡಾವಳಿಗಳನ್ನು ಸರ್ಕಾರ ತಿರಸ್ಕಾರ ಮಾಡಲಿ ಎಂದು ಒತ್ತಾಯಿಸಿ ಗ್ರಾಮ ಪಂಚಾಯಿತಿ ಸದಸ್ಯರ ಮದ್ದೂರು ತಾಲೂಕು ಒಕ್ಕೂಟದ ಸದಸ್ಯರು ಬುಧವಾರ ಪಟ್ಟಣದ ತಾಲೂಕು ಪಂಚಾಯಿತಿ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ತಾಲೂಕು ಪಂಚಾಯಿತಿ ಕಚೇರಿ ಮುಂದೆ ಜಮಾಯಿಸಿದ ಒಕ್ಕೂಟದ ಸದಸ್ಯರು, ಸರ್ಕಾರದ ನಡೆ ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಒಕ್ಕೂಟದ ತಾಲೂಕು ಅಧ್ಯಕ್ಷ ಜಿ.ಎನ್.ಸತ್ಯ ಮಾತನಾಡಿ, ಆ.19ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, 1993 ರ ಪ್ರಕರಣಗಳಿಗೆ ತಿದ್ದುಪಡಿ ಮತ್ತು ಗ್ರಾಮ ಪಂಚಾಯಿತಿ ನೌಕರರ ಸೇವಾ ವಿಷಯಗಳಿಗೆ ಸಂಬಂಧಿಸಿದ ನಡಾವಳಿಗಳು ಸಂವಿಧಾನ ವಿರೋಧಿಯಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾ.ಪಂ. ಇಒ ಸಂದೀಪ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಂ.ಇ.ಕೃಷ್ಣ, ಗೌರವಾಧ್ಯಕ್ಷ ಎಸ್.ದಯಾನಂದ, ಉಪಾಧ್ಯಕ್ಷರಾದ ಇ.ನಳಿನಿ, ಎಸ್.ಸಿ.ತಮ್ಮೇಗೌಡ, ಎಂ.ಮಹೇಶ್, ಸಿ.ಶಿವಲಿಂಗಯ್ಯ, ರಾಮಕೃಷ್ಣ, ಸಂಘಟನಾ ಕಾರ್ಯದರ್ಶಿಗಳಾದ ವಿಜಯ್ಎನ್.ಗೌಡ, ಎ.ಜಗದೀಶ್, ಮಾದೇಶ್, ಚಂದ್ರಶೇಖರ, ಶ್ವೇತಾ, ಖಜಾಂಜಿ ಎಚ್.ಕೆ.ನಂದೀಶ್ಗೌಡ ಸೇರಿದಂತೆ ಇತರರಿದ್ದರು.