ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ವಿುಸಬೇಕು ಎಂದು ಆಗ್ರಹಿಸಿ ಜಿಲ್ಲೆಯ ವಿವಿಧ ಸಂಘಟನೆಗಳ ಒಕ್ಕೂಟ ಹಾಗೂ ಸಾರ್ವಜನಿಕರು ಶನಿವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪಟ್ಟಣ ಪಂಚಾಯಿತಿ ಆವರಣದಲ್ಲಿ ಯಕ್ಷಗಾನ ಚಂಡೆಯ ವಾದನ ನಡೆಸಿ ಜಾಗೃತಿ ಮೂಡಿಸಲಾಯಿತು. ಹಿರಿಯ ವಕೀಲ ಡಿ.ಎ. ಕಾಮತ್ ಅವರು ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೋರಾಟಕ್ಕೆ ಚಾಲನೆ ನೀಡಿದರು.
ಪಟ್ಟಣ ಪಂಚಾಯಿತಿ ಆವರಣದಲ್ಲಿ ಜಮಾಯಿಸಿದ ಹೋರಾಟಗಾರರು ’ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕೆ ಬೇಕು’ ಎಂದು ಘೊಷಣೆ ಕೂಗುತ್ತ ಮಿನಿವಿಧಾನ ಸೌಧದದವರೆಗೆ ಮೆರವಣಿಗೆ ನಡೆಸಿದರು.