ಶ್ರೀರಂಗಪಟ್ಟಣ: ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು ಎಂದು ರಿವರ್ ವ್ಯಾಲಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಆದರ್ಶ್ ರಾಮೇಗೌಡ ತಿಳಿಸಿದರು.
ಪಟ್ಟಣದ ಹೊರವಲಯದ ರಿವರ್ ವ್ಯಾಲಿ ಶಿಕ್ಷಣ ಸಂಸ್ಥೆಯ ಶಾಲಾ ಆವರಣದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಕ್ರೀಡಾಕೂಟ ಹಾಗೂ ವಿವಿಧ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಮಕ್ಕಳು ಶಿಕ್ಷಣದ ಜತೆಗೆ ಕ್ರೀಡೆ, ಸಂಗೀತ, ನಾಟ್ಯ, ನಟನೆಯಂತಹ ಸಾಂಸ್ಕೃತಿಕ ಮನೋರಂಜನಾ ಕ್ಷೇತ್ರಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಶಿಕ್ಷಕರು ಹಾಗೂ ಪಾಲಕರು ಸಹ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.
ಇದಕ್ಕೂ ಮೊದಲು ಮಕ್ಕಳಿಗೆ ಲೆಮನ್ ಇನ್ ಸ್ಪೂನ್, ಮ್ಯೂಸಿಕಲ್ ಚೇರ್, ಆಶುಭಾಷಣ ಸ್ಪರ್ಧೆ, ಸ್ಥಳದಲ್ಲೇ ನಾಟಕ ರಚಿಸಿ ಪಾತ್ರ, ಏಕಪಾತ್ರಾಭಿನಯ, ಹಾಡುಗಾರಿಕೆ ಸೇರಿದಂತೆ ಹಲವು ರೀತಿಯ ಸ್ಪರ್ಧೆಗಳು ನಡೆದವು. ಸಂಸ್ಥೆಯ ಮ್ಯಾನೆಜಿಂಗ್ ಟ್ರಸ್ಟಿ ನಮ್ರತಾ, ಟ್ರಸ್ಟಿ ವಿಕ್ಟೋರಿಯಾ, ಶಾಲೆಯ ಪ್ರಾಂಶುಪಾಲೆ ಭಾನುಪ್ರಿಯ ಉಪಸ್ಥಿತರಿದ್ದರು.