ಶಾಸಕ ಸಿ.ಎನ್.ಬಾಲಕೃಷ್ಣ ಸಲಹೆ
ಶ್ರವಣಬೆಳಗೊಳ: ಉತ್ತಮ ಆರೋಗ್ಯ ಸಮಾಜದ ಬಹುಮುಖ್ಯ ಭಾಗವಾಗಿದ್ದು, ಪರಿಸರ ಸ್ವಚ್ಛತೆಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಇಲ್ಲಿನ ಚಾವುಂಡರಾಯ ಸಭಾ ಮಂಟಪದಲ್ಲಿ ಬುಧವಾರ ಸ್ವಚ್ಛ ಭಾರತ್ ಮಿಷನ್ ಹಾಗೂ ಜಲಜೀವನ್ ಮಿಷನ್ ಯೋಜನೆ ಮತ್ತು ಎಚ್ಎಎಲ್ ಸಂಸ್ಥೆ ಸಹಯೋಗದೊಂದಿಗೆ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಸ್ವಚ್ಛತಾ ಹೀ ಸೇವಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕ್ಷೇತ್ರದ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಆಶಯದಂತೆ 2018ರ ಮಹಾಮಸ್ತಕಾಭಿಷೇಕ ಮಹೋತ್ಸವ ಸಂದರ್ಭದಲ್ಲಿ ಶ್ರವಣಬೆಳಗೊಳವನ್ನು ಸ್ವಚ್ಛತಾ ಐಕಾನ್ ಪಟ್ಟಣವೆಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಕಾಂತರಾಜ್ ಮಾತನಾಡಿ, ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಸೆ.15 ರಿಂದ ಅ.2ರವರೆಗೆ ಸ್ವಚ್ಛತಾ ಹೀ ಆಂದೋಲನ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಎಚ್ಎಎಲ್ ಮುಖ್ಯ ವ್ಯವಸ್ಥಾಪಕ ಸುರೇಶ್ ಅಬ್ಬೊಜು ಮಾತನಾಡಿದರು. ನಂತರ ಶಾಲಾ ವಿದ್ಯಾರ್ಥಿಗಳ ಸೈಕಲ್ ಜಾಥಾಗೆ ಚಾಲನೆ ನೀಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನುರಾಧ ಲೋಹಿತ್, ಜಿಲ್ಲಾ ಪಂಚಾಯಿತಿ ಯೋಜನಾ ಸಂಯೋಜಕ ಪರಪ್ಪಸ್ವಾಮಿ, ತಾಲೂಕು ಪಂಚಾಯಿತಿ ಇಒ ಸುನಿಲ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಂಕರಮೂರ್ತಿ, ಪಿಡಿಒ ನಂಜುಂಡೇಗೌಡ, ವೈದ್ಯಾಧಿಕಾರಿ ಡಾ.ಬಿ.ಆರ್.ಯುವರಾಜ್, ಡಾ.ಪ್ರವೀಣ್ ಮುಂತಾದವರಿದ್ದರು.