More

    ಪಾರದರ್ಶಕ ಕೆಲಸ ನಿರ್ವಹಿಸಲಿ ಅಧಿಕಾರಿಗಳು  – ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಸೂಚನೆ – ಮಾಹಿತಿ ಹಕ್ಕು ಅಧಿನಿಯಮ ಕಾರ್ಯಾಗಾರ

    ದಾವಣಗೆರೆ: ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಉತ್ತಮ ಹಾಗೂ ಪಾರದರ್ಶಕ ಕಾರ್ಯ ನಿರ್ವಹಿಸುವುದರ ಜತೆಗೆ ಜನಸ್ನೇಹಿ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ತಿಳಿಸಿದರು.
    ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಾಹಿತಿ ಹಕ್ಕು ಅಧಿನಿಯಮ 2005ರ ಕುರಿತ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ದೇಶದಲ್ಲಿ ಮಾಹಿತಿ ಹಕ್ಕು 2005 ರಲ್ಲಿ ಹೊಸ ಕ್ರಾಂತಿಯನ್ನೇ ಶುರು ಮಾಡಿದೆ. ಕಾಯ್ದೆಗಳನ್ನು ಜಾರಿಗೆ ತಂದು ಸರ್ಕಾರಿ ಕಚೇರಿಗಳ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದು ಇದರ ಮೂಲ ಉದ್ದೇಶವಾಗಿದೆ. ಯಾವುದೇ ಅಧಿಕಾರಿ, ಆರ್‌ಟಿಐ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕಚೇರಿಗಳಿಗೆ ಬಂದು ಸಂಪೂರ್ಣ ಮಾಹಿತಿ ಕೇಳಿ ಪಡೆಯುವ ಹಕ್ಕಿದೆ ಎಂದರು.
    ಆರ್.ಟಿ.ಐ ಕಾರ್ಯಕರ್ತರು ಸರ್ಕಾರಿ ಕಚೇರಿಗಳಿಗೆ ಮಾಹಿತಿಗೆಂದು ಬಂದಾಗ ಅಧಿಕಾರಿ-ಸಿಬ್ಬಂದಿ ಆತಂಕಕ್ಕೆ ಒಳಗಾಗದೆ ಇಲಾಖಾವಾರು ಸಮರ್ಪಕ ಮಾಹಿತಿ ಒದಗಿಸಬೇಕು. ಕಚೇರಿಗಳಲ್ಲಿ ಮಾಹಿತಿಯ ದಾಖಲೆಗಳನ್ನು ಕ್ರಮಬದ್ಧವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
    ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ 4.1ಎ ನಲ್ಲಿ ಕ್ರಮಬದ್ಧವಾಗಿ ಯಾವ ದಾಖಲೆಗಳನ್ನು ಸಾರ್ವಜನಿಕರಿಗೆ ಒದಗಿಸಲು ಅವಕಾಶವಿರುತ್ತದೆ ಎಂಬುದನ್ನು ತಿಳಿದು ಮಾಹಿತಿ ನೀಡಬೇಕು ಎಂದರು..
    ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಬಿ.ವೆಂಕಟರಮಣಪ್ಪ ಮಾಹಿತಿ ಹಕ್ಕು ಅಧಿನಿಯಮಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ವಿಚಾರ ವಿನಿಮಯ ಹಾಗೂ ಉಪನ್ಯಾಸ ನೀಡಿದರು.
    ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್, ಎಸ್ಪಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಜಿಪಂ ಯೋಜನಾಧಿಕಾರಿ ಮಲ್ಲಾನಾಯ್ಕ, ಎಎಸ್ಪಿ ವಿಜಯಕುಮಾರ್ ಎಂ.ಸಂತೋಷ್, ಉಪ ವಿಭಾಗಾಧಿಕಾರಿ ದುರ್ಗಾಶ್ರೀ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.
    ———–

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts