More

    ಪುರಸಭೆ ಸದಸ್ಯನ ಮೇಲೆ ಹಲ್ಲೆ ಮಾಡಿದ್ದ ಇಬ್ಬರ ಸೆರೆ

    ಕೆ.ಆರ್.ನಗರ: ಪುರಸಭೆ ಸದಸ್ಯ ಹಾಗೂ ನಗರ ಜೆಡಿಎಸ್ ಅಧ್ಯಕ್ಷ ಸಂತೋಷ್‌ಗೌಡ ಅವರ ಮೇಲೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.


    ಪುರಸಭೆ ಮಾಜಿ ಅಧ್ಯಕ್ಷ ನರಸಿಂಹರಾಜು, ಸಹೋದರ ನಾಗೇಂದ್ರ ಅವರನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ತಲೆಮರೆಸಿಕೊಂಡಿರುವ ಬೆನಕ, ಕನಕ, ವಿನು, ಪುನಿ, ಮಧು, ವಾಲ, ಮಂಜು ಅವರ ಪತ್ತೆಗೆ ಬಲೆ ಬೀಸಿದ್ದಾರೆ.


    ಗುರುವಾರ ರಾತ್ರಿ 10.30ರ ಸಮಯದಲ್ಲಿ ಪಟ್ಟಣದ ಆಂಜನೇಯ ಬಡಾವಣೆಯಲ್ಲಿ ಎರಡು ಗುಂಪುಗಳ ನಡುವೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ ಪರಸ್ಪರ ಮಾರಾಮಾರಿಗೆ ಕಾರಣವಾಗಿತ್ತು. ಈ ಸಂದರ್ಭದಲ್ಲಿ ತನ್ನ ಮೇಲೆ 9 ಜನರ ಗುಂಪು ರಕ್ತ ಬರುವಂತೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂದು ಸಂತೋಷ್‌ಗೌಡ ನೀಡಿದ ದೂರಿನ ಹಿನ್ನೆಲೆಯಲ್ಲಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


    ಗಾಯಗೊಂಡಿರುವ ಸಂತೋಷ್‌ಗೌಡ ಅವರನ್ನು ಇಲ್ಲಿನ ವಿಸ್ಮಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ವಿರುದ್ಧವೂ ದಲಿತ ಮಹಿಳೆಯನ್ನು ನಿಂದಿಸಿದ ಆರೋಪದಡಿ ವಾರದ ಹಿಂದೆ ಜಾತಿ ನಿಂದನೆ ಪ್ರಕರಣ ದಾಖಲಾಗಿರುವುದರಿಂದ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಸಂತೋಷ್‌ಗೌಡ ಅವರನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.


    ಸ್ಥಳಕ್ಕೆ ಪೊಲೀಸ್ ಇನ್ಸ್‌ಪೆಕ್ಟರ್ ರೇವಣ್ಣ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts