ಗೋಣಿಕೊಪ್ಪ: ಪೊನ್ನಂಪೇಟೆಯಲ್ಲಿ ಆಡಳಿತ ಸೌಧ ನಿರ್ಮಿಸಲಾಗುವುದು ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದರು.
18.75 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಹುದಿಕೇರಿ ನಾಡಕಚೇರಿ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಜನರಿಗೆ ಸರ್ಕಾರಿ ಸೇವೆ ನೀಡಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಆಡಳಿತ ಸೌಧ ನಿರ್ಮಾಣ ಸನ್ನಿಹಿತ. ಗ್ರಾಮೀಣ ಜನರಿಗೆ ಎಲ್ಲ ಸೇವೆಗಳು ನಿಗದಿತ ಸಮಯದೊಳಗೆ ಸಿಗಬೇಕು ಎಂಬ ನಿಟ್ಟಿನಲ್ಲಿ ಮತ್ತು ನಾಡಕಚೇರಿಗಳನ್ನು ಬಲಪಡಿಸಲು ಪೂರ್ವಯೋಜಿತ ಕಟ್ಟಡ ಸ್ಥಾಪಿಸಲಾಗುತ್ತಿದೆ. ಈ ನೆಲೆಯಲ್ಲಿ ಅಗತ್ಯವಿರುವ ಸಿಬ್ಬಂದಿಯನ್ನು ಭರ್ತಿ ಮಾಡಲಾಗುತ್ತಿದೆ. ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜನರ ಸೇವೆಗೆ ಒತ್ತು ನೀಡಿದಾಗ ಸಮಸ್ಯೆ ಶೀಘ್ರವಾಗಿ ಬಗೆಹರಿಸಲು ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾರ್ಯ ನಿಭಾಯಿಸಬೇಕು ಎಂದು ಸಲಹೆ ನೀಡಿದರು.
ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ, ಪೊನ್ನಂಪೇಟೆ ತಹಸೀಲ್ದಾರ್ ಎನ್.ಎಸ್.ಪ್ರಶಾಂತ್, ಹುದಿಕೇರಿ ಗ್ರಾಪಂ ಅಧ್ಯಕ್ಷ ವಾಸು ಬಿದ್ದಪ್ಪ, ಬಗರ್ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ತಾಲೂಕು ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ಬಿಜೆಪಿ ಮಂಡಲ ಅಧ್ಯಕ್ಷ ನೆಲ್ಲಿರ ಚಲನ್ಕುಮಾರ್, ಕಾರ್ಯದರ್ಶಿ ಅಜ್ಜಿಕುಟ್ಟೀರ ಪ್ರವೀಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಂಞಂಗಡ ಅರುಣ್ ಭೀಮಯ್ಯ, ತಾಲೂಕು ಸರ್ವೇ ಅಧಿಕಾರಿ ಬಾನಂಗಡ ಅರುಣ್ ಇದ್ದರು.