ಬೆಳಗಾವಿ: ಸಂಸದ ಪ್ರಜ್ವಲ್ ರೇವಣ್ಣಗೆ ಸೇರಿದ್ದು ಎನ್ನಲಾದ ಅಶ್ಲೀಲ್ ವಿಡಿಯೋ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೆಸರು ಬಲವಾಗಿ ಕೇಳಿ ಬರುತ್ತಿದ್ದು, ಈ ಕುರಿತು ಸಮಗ್ರವಾಗಿ ತನಿಖೆ ನಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆಗ್ರಹಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಪ್ರತಿನಿಧಿಗಳು ಸಾರ್ವಜನಿಕ ಬದುಕಿಗೆ ಬಂದಾಗ ಈ ರೀತಿ ವ್ಯವಸ್ಥೆಗೆ ಆಸ್ಪದ ಕೊಡಬಾರದು. ಆದರೆ, ರಾಜ್ಯ ಸರ್ಕಾರ ಪ್ರಜ್ವಲ್ ಪ್ರಕರಣದಲ್ಲಿ ರಾಜಕೀಯ ದ್ವೇಷ ಸಾಧಿಸುತ್ತಿದೆ.
ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ ಹೆಸರು ಕೇಳಿ ಬಂದಿದೆ. ಆದರೆ, ಶಿವಕುಮಾರ ಅವರು ಈ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ ಎನ್ನುತ್ತಿದ್ದಾರೆ. ವಕೀಲ ದೇವರಾಜೇಗೌಡ ಅವರು ಪ್ರಜ್ವಲ್ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ ಭಾಗಿಯಾಗಿದ್ದಾರೆ ಎಂದು ದಾಖಲೆ ಸಮೇತ ಬಹಿರಂಗ ಪಡಿಸಿದ್ದಾರೆ. ಹಾಗಾಗಿ ಈ ಪ್ರಕರಣದಲ್ಲಿ ಪಾರದರ್ಶಕ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.
ಯಾರೂ ಇನ್ನೊಬ್ಬರ ಚಾರಿತ್ರ್ಯ ಹರಣ ಮಾಡಲು ಹೋಗಬಾರದು. ರಾಜಕೀಯವಾಗಿ ಯಾರನ್ನೋ ಮುಗಿಸುವ ಕಾರಣದಿಂದ ಅವರ ದೋಷಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವುದು ಸರಿ ಅಲ್ಲ. ಯಾವುದೇ ಪಕ್ಷದಲ್ಲೂ ಈ ರೀತಿ ಬ್ಲಾೃಕ್ಮೇಲ್ ಮಾಡುವುದಕ್ಕೆ ಆಸ್ಪದ ಕೊಡಬಾರದು ಎಂದರು.