ಹನೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಆಯ್ಕೆಯಾಗಿದ್ದ 20 ಫಲಾನುಭವಿಗಳಿಗೆ ಮಂಗಳವಾರ ಶಾಸಕ ಆರ್.ನರೇಂದ್ರ ದ್ವಿಚಕ್ರ ವಾಹನ ವಿತರಿಸಿದರು.
2022-23ನೇ ಸಾಲಿನಲ್ಲಿ ಡಾ.ಬಿ.ಆರ್ ಅಂಬೇಡ್ಕರ್, ಆದಿಜಾಂಬವ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವತಿಯಿಂದ ಸಮುದಾಯ ಯುವಕ, ಯುವತಿಯರು ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ಬ್ಯಾಟರಿ ಚಾಲಿತ ದ್ವಿಚಕ್ರ ವಾಹನ ನೀಡಲು ನಿರ್ಧರಿಸಲಾಗಿತ್ತು. ಆದರೆ ಫಲಾನುಭವಿಗಳ ಒತ್ತಾಯದ ಮೇರೆಗೆ ಪೆಟ್ರೋಲ್ ಚಾಲಿತ ದ್ವಿಚಕ್ರ ವಾಹನ ನೀಡಲಾಗಿದೆ. ಇದನ್ನು ಸದುಪಯೋಗ ಪಡೆಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಅವರು ತಿಳಿಸಿದರು.
ಒತ್ತಾಯ: ಇದೇ ವೇಳೆ ಆದಿಜಾಂಬವ ಅಭಿವೃದ್ಧಿ ನಿಗಮದ ವತಿಯಿಂದ 20 ಫಲಾನುಭವಿಗಳಿಗೆ ಬ್ಯಾಟರಿ ಚಾಲಿತ ದ್ವಿಚಕ್ರವನ್ನು ವಿತರಿಸಲು ಆಯೋಜಿಸಲಾಗಿತ್ತು. ಆದರೆ ಫಲಾನುಭವಿಗಳು ಪೆಟ್ರೋಲ್ ಚಾಲಿತ ವಾಹನ ನೀಡಬೇಕೆಂದು ಒತ್ತಾಯಿಸಿದರು. ಈ ಬಗ್ಗೆ ಸಮುದಾಯದ ಮುಖಂಡ ಸುದೇಶ್ ಶಾಸಕ ಅರ್.ನರೇಂದ್ರ ಅವರಿಗೆ ಮನವಿ ಮಾಡಿದರು. ಇನ್ನೆರಡು ದಿನಗಳೊಳಗಾಗಿ ಪೆಟ್ರೋಲ್ ಚಾಲಿತ ದ್ವಿಚಕ್ರ ವಾಹನ ವಿತರಿಸುವಂತೆ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯ ಹರೀಶ್ಕುಮಾರ್, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿಜಯಕುಮಾರ್, ಮುಖಂಡರಾದ ಚಿಕ್ಕತಮ್ಮಯ್ಯ, ರಾಜು, ವೆಂಕಟೇಶ್, ಮಹೇಶ್ ಇತರರು ಇದ್ದರು.