More

    ಫೆಬ್ರವರಿಯಲ್ಲಿ ಜನಜಾಗೃತಿ ಅಭಿಯಾನ

    ಬೆಳಗಾವಿ: ರಾಸಾಯನಿಕ ಮುಕ್ತ ಕೃಷಿ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಒಂದು ಲಕ್ಷ ಹಳ್ಳಿಗಳಲ್ಲಿ ಸಿರಿಧಾನ್ಯ ಮತ್ತು ಸಾವಯವ ಕೃಷಿ ಪ್ರೋತ್ಸಾಹಿಸುವ ಜನಜಾಗೃತಿ ಅಭಿಯಾನ ಫೆಬ್ರವರಿ ಮೊದಲ ವಾರದಲ್ಲಿ ಆರಂಭಗೊಳ್ಳಲಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಘಟಕದ ಅಧ್ಯಕ್ಷ ರಾಜಕುಮಾರ್ ಚಹರ್ ಹೇಳಿದರು.

    ನಗರದಲ್ಲಿ ಸೋಮವಾರ ಜರುಗಿದ ಬಿಜೆಪಿ ರಾಷ್ಟ್ರೀಯ ರೈತ ಮೋರ್ಚಾ ಕಾರ್ಯಕಾರಿಣಿ ಸಮಾರೋಪ ಸಮಾರಂಭದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿ ಸಬ್ಸಿಡಿ, ಸಹಾಯಧನ ಯೋಜನೆಗಳನ್ನು ಜಾರಿಗೆ ತಂದಿವೆ. ಅಲ್ಲದೆ, ಸಿರಿಧಾನ್ಯ ಮತ್ತು ಸಾವಯವ ಬೆಳೆ ಬೆಳೆಯಲು ರೈತರಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ ನದಿ ದಡದ ಕೃಷಿ ಜಮೀನುಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದರು.

    ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ರೈತರಿಗೆ ವಾರ್ಷಿಕ 6 ಸಾವಿರ ರೂ. ನೀಡುತ್ತದೆ. ಅದಕ್ಕೆ ಕರ್ನಾಟಕ ಸರ್ಕಾರವು ನಾಲ್ಕು ಸಾವಿರ ರೂ. ಸೇರಿಸಿ ಹತ್ತು ಸಾವಿರ ರೂ. ಹಣವನ್ನು ರೈತರಿಗೆ ನೀಡುತ್ತಿದೆ. ರೈತ ಮತ್ತು ಕೂಲಿ ಕಾರ್ಮಿಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿಗೆ ತಂದಿದೆ. ಅಲ್ಲದೆ, ಸಿರಿಧಾನ್ಯ ಮತ್ತು ಸಾವಯವ ಬೆಳೆಗಳನ್ನು ಬೆಳೆಯಲು ಪ್ರತಿ ಹೆಕ್ಟೇರ್‌ಗೆ 10 ಸಾವಿರ ರೂ. ಸಹಾಯಧನ ನೀಡುತ್ತಿದೆ. ಕರ್ನಾಟಕ ಸರ್ಕಾರದ ಈ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಕೇಂದ್ರ ಸರ್ಕಾರವು 2023-24ನೇ ಸಾಲಿನ ಬಜೆಟ್‌ನಲ್ಲಿ ಸಿರಿಧಾನ್ಯ ಮತ್ತು ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿ ಹೊಸ ಯೋಜನೆಗಳನ್ನು ಘೋಷಣೆ ಮಾಡಲಿದೆ. ಅಲ್ಲದೆ, ಕೃಷಿ ಬಜೆಟ್ ಗಾತ್ರವನ್ನು 1.35 ಲಕ್ಷ ಕೋಟಿ ರೂ. ವಿಸ್ತರಿಸಿದೆ. ಮುಂಬರುವ ದಿನಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಲಿದ್ದು, ಅದಕ್ಕೆ ಪೂರಕವಾಗಿ ರೈತರಿಗೆ ತರಬೇತಿ ನೀಡಿ ಸಜ್ಜುಗೊಳಿಸುವ ಕೆಲಸವನ್ನು ಬಿಜೆಪಿ ರೈತ ಮೋರ್ಚಾ ಮಾಡಿಕೊಂಡು ಬರುತ್ತಿದೆ ಎಂದು ಹೇಳಿದರು. ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಈರಣ್ಣ ಕಡಾಡಿ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ ಇತರರಿದ್ದರು.

    ಹೆಕ್ಟೇರ್‌ಗೆ 15 ಸಾವಿರ ರೂ. ಏರಿಕೆ

    ರಾಜ್ಯದಲ್ಲಿ ಸಿರಿಧಾನ್ಯ ಮತ್ತು ಸಾವಯವ ಬೆಳೆಗಳನ್ನು ಬೆಳೆಯಲು ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರವು ಪ್ರತಿ ಹೆಕ್ಟೇರ್‌ಗೆ 10 ಸಾವಿರ ರೂ.ನೀಡುತ್ತಿದೆ. ಅದನ್ನು 2023-24ನೇ ಸಾಲಿನಲ್ಲಿ ಬಜೆಟ್‌ನಲ್ಲಿ 15 ಸಾವಿರ ರೂ. ಏರಿಕೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ. ಜ.31ರಂದು ಧಾರವಾಡದಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ರಾಜ್ಯದ 52 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ 380 ಕೋಟಿ ರೂ. ಡೀಸೆಲ್ ಸಬ್ಸಿಡಿ ಹಣ ಬಿಡುಗಡೆ ಮಾಡಲಿದ್ದಾರೆ. ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts