ಲಕ್ಕೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಸ್ತ್ರೀಶಕ್ತಿ ಸಂಘಗಳಿಗೆ 5 ಲಕ್ಷ ರೂ., ರೈತರಿಗೆ 3 ಲಕ್ಷ ರೂ. ಬಡ್ಡಿರಹಿತ ಸಾಲ ನೀಡುತ್ತಿದ್ದು, ಈಗಿನ ಬಿಜೆಪಿ ಸರ್ಕಾರ ಮಹಿಳೆಯರಿಗೆ 10 ಲಕ್ಷ ರೂ.ವರೆಗೂ ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸಬೇಕು ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.
ತಾಳಕುಂಟೆ ಗ್ರಾಮದ ದೊಡ್ಡಕಲ್ಲಹಳ್ಳಿ ಕೃಷಿ ಪತ್ತಿನ ಸೇವಾ ಸಹಕಾರ ಸಂಘದಿಂದ ಭಾನುವಾರ ಹಮ್ಮಿಕೊಂಡಿದ್ದ ಕೋಲಾರ&-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಹಯೋಗದಲ್ಲಿ 11 ಮಹಿಳಾ ಸ್ವಸಹಾಯ ಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ 55 ಲಕ್ಷ ರೂ. ಸಾಲದ ಚೆಕ್ ವಿತರಿಸಿ ಮಾತನಾಡಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅವರು ಮುಚ್ಚಿಹೋಗಿದ್ದ ಡಿಸಿಸಿ ಬ್ಯಾಂಕಿಗೆ ಮರುಜೀವ ನೀಡಿದ್ದಾರೆ. ಬ್ಯಾಂಕಿನಿಂದ ಸುಮಾರು 2 ಸಾವಿರ ಕೋಟಿ ರೂ.ಗಳನ್ನು ಸಾಲದ ರೂಪದಲ್ಲಿ ವಿತರಿಸಿ ಮಹಿಳೆಯರು, ರೈತರು ಸೇರಿ ಎಲ್ಲ ಸಮುದಾಯದ ಜನತೆಗೆ ಅನುಕೂಲ ಕಲ್ಪಿಸಿದ್ದಾರೆ ಎಂದರು.
ಸಂಘದ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ವಹಿಸಿ ಹೆಚ್ಚು ಸಂಘಗಳನ್ನು ಸ್ಥಾಪಿಸುವುದರ ಜತೆಗೆ ಸಾಲಸೌಲಭ್ಯ ಸಿಗುವಂತೆ ಮಾಡಬೇಕು. ತಾಲೂಕಿನಲ್ಲಿ ಎಷ್ಟೇ ಸಂಘಗಳು ಪ್ರಾರಂಭವಾದರೂ ಸಹ ಅವುಗಳಿಗೆ ಬಡ್ಡಿರಹಿತ ಸಾಲ ನೀಡಲಾಗುತ್ತದೆ ಎಂದರು.
ಜಿಲ್ಲೆಯಲ್ಲಿ ಸಮರ್ಪಕ ಮಳೆ ಇಲ್ಲದೆ ರೈತರು, ಮಹಿಳೆಯರು ತಮ್ಮ ಜೀವನೋಪಾಯಕ್ಕಾಗಿ ಹೈನುಗಾರಿಕೆಯ ಮೂಲಕ ಜೀವನ ನಡೆಸುವಂತಾಗಿದೆ. ಮಹಿಳೆಯರು ಹಾಗೂ ರೈತರು ಆರ್ಥಿಕವಾಗಿ ಪ್ರಗತಿ ಹೊಂದಬೇಕು ಎಂಬ ಉದ್ದೇಶದಿಂದ ಹಲವು ವರ್ಷಗಳಿಂದ ಡಿಸಿಸಿ ಬ್ಯಾಂಕ್ ಕಾರ್ಯನಿರ್ವಹಿಸುತ್ತಿದೆ. ಮಹಿಳೆಯರು, ರೈತರು ಹಾಗೂ ಇತರ ವರ್ಗಗಳ ಆರ್ಥಿಕ ಪ್ರಗತಿ ಹೊಂದಬೇಕು ಎಂಬ ಉದ್ದೇಶದಿಂದ ಡಿಸಿಸಿ ಬ್ಯಾಂಕ್ ವಿತರಿಸುತ್ತಿರುವ ಶೂನ್ಯ ಬಡ್ಡಿ ದರದ ಸಾಲ ಯೋಜನೆಯನ್ನು ಅರ್ಹ ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮಾತನಾಡಿ, ಮೀಟರ್ ಬಡ್ಡಿ ದಂಧೆಯಿಂದ ಕಂಗೆಟ್ಟಿರುವ ಮಹಿಳೆಯರು ಹಾಗೂ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಡಿಸಿಸಿ ಬ್ಯಾಂಕ್ ಶೂನ್ಯ ಬಡ್ಡಿ ದರದಲ್ಲಿ ಸಾಲವನ್ನು ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹಾಗೂ ಮಾಜಿ ಸಚಿವೆ ಮೋಟಮ್ಮ ಅವರ ಅವಧಿಯಲ್ಲಿ ಸ್ತ್ರೀಶಕ್ತಿ ಸಂಘಗಳು ಪ್ರಾರಂಭವಾಗಿದ್ದು, ಅಂದಿನಿಂದ ಇಂದಿನವರೆಗೂ ರಾಜ್ಯದಲ್ಲಿ ಮಹಿಳಾ ಸ್ತ್ರೀಶಕ್ತಿ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಸಂಘಗಳ ಬೇಡಿಕೆಗೆ ಅನುಗುಣವಾಗಿ ಸಾಲ ಸೌಲಭ್ಯ ಸಿಗುತ್ತಿದೆ. ರೈತರಿಗೆ 3 ಲಕ್ಷ ರೂ., 10 ಜನ ಮಹಿಳೆಯರ ಗುಂಪಿಗೆ 5 ಲಕ್ಷ ರೂ.ವರೆಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ಅರ್ಹ ಫಲಾನುಭವಿಗಳು ಸಾಲವನ್ನು ಪಡೆದು ಆರ್ಥಿಕ ಚಟುವಟಿಕೆಗಳಿಗೆ ಬಳಸಿಕೊಳ್ಳುವುದರ ಮೂಲಕ ಸಾಲ ಮರುಪಾವತಿಸಿ ಬೇರೆಯವರಿಗೆ ಸಾಲ ನೀಡಲು ಸಹಕಾರ ನೀಡಬೇಕು ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಚ್.ಚನ್ನರಾಯಪ್ಪ, ಸರಕಾರಿ ಯೂನಿಯನ್ ನಿರ್ದೇಶಕ ಎನ್.ಶಂಕರ್ನಾರಾಯಣಗೌಡ, ಮುಖಂಡರಾದ ಎಂ.ಆಂಜಿನಪ್ಪ, ದಲಿತ ಸಂಘರ್ಷ ಸಮಿತಿಯ ಸಂಚಾಲಕ ಸಂತೋಷ್, ನಾಗಾಪುರ ನವೀನ್, ಶಂಕರ್ ಮತ್ತಿತರರಿದ್ದರು.