ಮುಂಡಗೋಡ: ಸಮಯಕ್ಕೆ ಸರಿಯಾಗಿ ಸಾರಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲ ಗ್ರಾಮಗಳ ವಿದ್ಯಾರ್ಥಿಗಳು ಪಟ್ಟಣದ ಕೋರ್ಟ್ ವೃತ್ತದ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು. ನಂದಿಕಟ್ಟಾ ಪಂಚಾಯಿತಿ ವ್ಯಾಪ್ತಿಯ ಹುಲಿಹೊಂಡ, ನಂದಿಕಟ್ಟಾ, ಬಸಾಪುರ ಮತ್ತಿತರ ಗ್ರಾಮಗಳಿಂದ 150ಕ್ಕೂ ಅಧಿಕ ವಿದ್ಯಾರ್ಥಿಗಳು ಮುಂಡಗೋಡ ಪಟ್ಟಣದ ಶಾಲಾ- ಕಾಲೇಜುಗಳಿಗೆ ಬರುತ್ತಾರೆ. ಆದರೆ, ಸಮಯಕ್ಕೆ ಸರಿಯಾಗಿ ಬಸ್ ಬಾರದ ಕಾರಣ ತರಗತಿಗಳಿಗೆ ಹಾಜರಾಗಲು ವಿಳಂಬವಾಗುತ್ತಿದೆ. ಈ ಕುರಿತು ಎರಡ್ಮೂರು ಬಾರಿ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ವಾಕರಸಾ ಸಂಸ್ಥೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ನಿಲ್ದಾಣಾಧಿಕಾರಿ ಎಂ. ಆರ್. ಮಾದರ್ ಅವರು, ಇನ್ನು ಮುಂದೆ ಸಮಯಕ್ಕೆ ಸರಿಯಾಗಿ ಬಸ್ ಓಡಿಸಲಾಗುವುದು ಎಂದು ಲಿಖಿತ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.