ದಾವಣಗೆರೆ: ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಮಾರ್ಚ್ 9ರಂದು ಬೆಳಗ್ಗೆ 9ರಿಂದ 11ಗಂಟೆವರೆಗೆ 2 ತಾಸುಗಳ ಸಾಂಕೇತಿಕ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು, ದಾವಣಗೆರೆ ಜನರು, ವರ್ತಕರು ಬೆಂಬಲ ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದರು.
ಭ್ರಷ್ಟಾಚಾರಮುಕ್ತ ಕರ್ನಾಟಕಕ್ಕಾಗಿ ಬಿಜೆಪಿ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕಿದೆ. ಈ ದಿಸೆಯಲ್ಲಿ ಬಂದ್ ನಡೆದ ಸಲಾಗುತ್ತಿದೆ. ಗುರುವಾರ ಬೆಳಗ್ಗೆ 8ಕ್ಕೆ ಜಯದೇವ ವೃತ್ತದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು
ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶಾಲಾ ಕಾಲೇಜು ಮಕ್ಕಳಿಗೆ ಪರೀಕ್ಷೆಗಳು ಪ್ರಾರಂಭ ಆಗಿದೆ. ಇದೂ ಸೇರಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ತೊಂದರೆ ಆಗದಂತೆ ಬಂದ್ ಮಾಡಲಾಗುವುದು ಎಂದರು.
ಬಿಜೆಪಿ ಭ್ರಷ್ಟಾಚಾರದ ಸಂಕಲ್ಪ ಯಾತ್ರೆ ಮಾಡುತ್ತಿದ್ದು, ಶೇ.40ರಷ್ಟು ಭ್ರಷ್ಟಾಚಾರದಿಂದಾಗಿ ಶೋಷಣೆ, ಹಿಂಸೆ, ಬೆಲೆ ಏರಿಕೆಯಿಂದ ಜನರ ಬದುಕು ಸರ್ವನಾಶವಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದಲೂ ಜನರಿಗೆ ದ್ರೋಹ ಮಾಡಿದೆ ಎಂದು ದೂರಿದರು.
ಗುತ್ತಿಗೆದಾರದಿಂದ ಶೇ. 40ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂಬ ಆರೋಪಕ್ಕೆ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣ ಬಲವಾದ ಸಾಕ್ಷಿಯಾಗಿದ್ದು, ಮುಖ್ಯಮಂತ್ರಿ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ದಿನೇಶ್ ಶೆಟ್ಟಿ, ಎ.ನಾಗರಾಜ್, ಅನಿತಾಬಾಯಿ ಮಾಲತೇಶ್, ಸುಷ್ಮಾಪಾಟೀಲ್, ಅಯೂಬ್ ಪೈಲ್ವಾನ್, ಮಲ್ಲಿಕಾರ್ಜುನ್ ಇತರರು ಇದ್ದರು.