ಬೆಳಗಾವಿ: ಬಿಮ್ಸ್ ಆಸ್ಪತ್ರೆಯಲ್ಲಿ ಅಗತ್ಯ ಸುಧಾರಣೆ ತರಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಜಿಪಂ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರೊನಾ ಚಿಕಿತ್ಸೆಗೆ ಅಗತ್ಯ ಬಿದ್ದರೆ ಎಲ್ಲ ಮುರಾರ್ಜಿ ದೇಸಾಯಿ ವಸತಿ ಶಾಲೆ, ಸಮುದಾಯ ಭವನ ಪಡೆದು ಬೆಡ್ ಹಾಗೂ ವೈದ್ಯರ ಸಂಖ್ಯೆ ಹೆಚ್ಚಿಸುತ್ತೇವೆ ಎಂದರು.
ಬಳ್ಳಾರಿಯ ಜೆಎಸ್ಡಬ್ಲುನಿಂದ 300 ಟನ್ ಆಕ್ಸಿಜನ್ ಹಂಚಿಕೆ ಆಗಿದೆ. ಅದೇ ರೀತಿ ಕೇಂದ್ರ ಸರ್ಕಾರದಿಂದ 1000 ಟನ್ ಹಂಚಿಕೆಯಾಗಿದೆ. ಮುಂದಿನ ತಿಂಗಳು 1,400 ಟನ್ ಆಕ್ಸಿಜನ್ ಬೇಕಾಗುತ್ತದೆ. ಅದನ್ನು ಮುಂದಿನ ದಿನಗಳಲ್ಲಿ ಬಳ್ಳಾರಿಯ ಜಿಂದಾಲ್ ಕಾರ್ಖಾನೆಯಿಂದ ತರಿಸಿಕೊಳ್ಳುತ್ತೇವೆ.
ಸಂಬಂಧಪಟ್ಟ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಮಾತನಾಡಿದ್ದಾರೆ. ನಿಮಗೆ ಸಾಕಾಗುವಷ್ಟು ಆಕ್ಸಿಜನ್ ನೀಡುತ್ತೇವೆ ಎಂದು ಜಿಂದಾಲ್ನವರು ಭರವಸೆ ನೀಡಿದ್ದಾರೆ. ಅದೇ ರೀತಿ ಕೇಂದ್ರ ಸರ್ಕಾರಕ್ಕೂ ಹೆಚ್ಚು ಬೇಡಿಕೆ ಇಟ್ಟಿದ್ದೇವೆ. ನಮ್ಮಲ್ಲಿಯೇ ಉತ್ಪಾದನೆ ಆಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಆಕ್ಸಿಜನ್ ಪಡೆಯುವ ವಿಚಾರ ಸದ್ಯಕ್ಕೆ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರತಿ ತಾಲೂಕಿನಲ್ಲಿ 500 ಬೆಡ್: ಜಿಲ್ಲಾಮಟ್ಟದಲ್ಲಿ ಅಷ್ಟೇ ಅಲ್ಲದೆ, ಪ್ರತಿ ತಾಲೂಕಿನಲ್ಲಿ 500 ಬೆಡ್ ವ್ಯವಸ್ಥೆ ಮಾಡುವಂತೆ ಈಗಾಗಲೇ ಸೂಚಿಸಿದ್ದೇವೆ. ರಸ್ತೆಯಲ್ಲಿ, ಎಪಿಎಂಸಿ ಮುಂಭಾಗದಲ್ಲಿ ತರಕಾರಿ ಮಾರಾಟ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಯಿಸಿದ ಅವರು, ದೊಡ್ಡ, ದೊಡ್ಡ ಮೈದಾನದಲ್ಲಿ ತರಕಾರಿ ಮಾರಾಟಕ್ಕೆ ಅವಕಾಶ ನೀಡಿದ್ದೇವೆ. ಅಲ್ಲಿ ದೈಹಿಕ ಅಂತರ ಕಾಪಾಡಿಕೊಳ್ಳಲು ಅನುಕೂಲ ಆಗುತ್ತದೆ ಎಂದು ಉತ್ತರಿಸಿದರು.