ಸಾಗರ: ಸಹಕಾರಿ ಬ್ಯಾಂಕ್ ಮತ್ತು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿರುವ ಬೆಳೆ ಸಾಲವನ್ನು ಮನ್ನಾ ಮಾಡಬೇಕು. ಸರ್ಕಾರದ ಮೇಲೆ ಒತ್ತಡ ತಂದು ಸಾಲ ಮನ್ನಾ ಮಾಡಿಸಲು ಪ್ರಯತ್ನಿಸಬೇಕು. ಇಲ್ಲವಾದರೆ ಡಿ. 15ರಂದು ಶಾಸಕ ಹರತಾಳು ಹಾಲಪ್ಪ ಅವರ ಕಚೇರಿ ಬಳಿ ಅನಿಧಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ಎಂ.ಬಿ.ಮಂಜಪ್ಪ ಹಿರೇನೆಲ್ಲೂರು ಹೇಳಿದ್ದಾರೆ.
ಕೊಳೆರೋಗ ಮತ್ತು ಎಲೆಚುಕ್ಕೆ ರೋಗದಿಂದ ಅಡಕೆ ಬೆಳೆಗಾರರು ಕಂಗಾಲಾಗಿದ್ದಾರೆ. ವಿಪರೀತ ಮಳೆಯಿಂದ ಫಸಲು ಕಳೆದುಕೊಂಡು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿರುವ ಬೆಳೆಸಾಲವನ್ನು ಕೂಡಲೇ ಮನ್ನಾ ಮಾಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಪಡಿಸಿದರು.
ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ, ಸೊರಬ ಕ್ಷೇತ್ರದ ಶಾಸಕ ಕುಮಾರ ಬಂಗಾರಪ್ಪ ಅವರು ರೈತರ ಸಂಕಷ್ಟಗಳನ್ನು ಸರ್ಕಾರಕ್ಕೆ ಮನವರಿಕೆ ಮಾಡಿ ಸಾಲಮನ್ನಾ ಮಾಡಿಸಬೇಕು. ತೆಗೆದುಕೊಂಡ ಕ್ರಮದ ಬಗ್ಗೆ ಬಹಿರಂಗ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದರು.
ಸಾಗರ ತಾಲೂಕಿನಲ್ಲಿ ಅತಿವೃಷ್ಟಿಯಿಂದ 600 ಹೆಕ್ಟೇರ್ಗೂ ಹೆಚ್ಚಿನ ಭತ್ತ, 2012 ಹೆಕ್ಟೇರ್ ಮೆಕ್ಕೆಜೋಳ ಸಂಪೂರ್ಣ ನಾಶವಾಗಿದೆ. ಕೊಳೆರೋಗ ಮತ್ತು ಎಲೆಚುಕ್ಕೆ ರೋಗದಿಂದ ಸುಮಾರು ಎರಡು ಸಾವಿರ ಹೆಕ್ಟೇರ್ ಅಡಕೆ ಬೆಳೆ ನಾಶವಾಗಿದೆ. ಸರ್ಕಾರ ಎ ಗ್ರೇಡ್ ಭತ್ತಕ್ಕೆ ಕ್ವಿಂಟಾಲ್ಗೆ 2060 ರೂ., ಸಾಧಾರಣ ಭತ್ತಕ್ಕೆ 2040 ರೂ. ಕನಿಷ್ಠ ಬೆಂಬಲಬೆಲೆ ಘೋಷಣೆ ಮಾಡಿದೆ. ಆದರೆ ಭತ್ತ ಖರೀದಿ ಕೇಂದ್ರವನ್ನೇ ಪ್ರಾರಂಭ ಮಾಡಿಲ್ಲ. ಕೆಲವು ಖಾಸಗಿ ಮಿಲ್ನವರು 1,200 ರೂ.ಗೆ ಭತ್ತ ಖರೀದಿ ಮಾಡಿ ರೈತರನ್ನು ವಂಚಿಸುತ್ತಿದ್ದಾರೆ. ರೈತರನ್ನು ವಂಚಿಸುತ್ತಿರುವ ಖಾಸಗಿ ಮಿಲ್ಗಳ ಲೈಸೆನ್ಸ್ ರದ್ದು ಪಡಿಸಬೇಕೆಂದು ಆಗ್ರಹಿಸಿದರು.