ಭದ್ರಾವತಿ: ಇತ್ತೀಚೆಗೆ ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದ ಹೊಸ ಸೇತುವೆಯ ತಡೆಗೋಡೆ ಕುಸಿದಿದ್ದು ಬುಧವಾರ ಸಂಜೆ ಶಿವಮೊಗ್ಗ ಉಪವಿಭಾಗಾಧಿಕಾರಿ ದೊಡ್ಡಗೌಡರ್, ಎಎಸ್ಪಿ ಜಿತೇಂದ್ರ ದಯಾಮ, ಪೌರಾಯುಕ್ತ ಮನುಕುಮಾರ್, ತಾಲೂಕು ದಂಡಾಧಿಕಾರಿ ಆರ್.ಪ್ರದೀಪ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಎರಡೂ ಬದಿಯ ತಡೆಗೋಡೆ ಸಂಪೂರ್ಣ ಹಾಳಾಗಿದೆ. ಸೇತುವೆ ಮೇಲೆ ಸಂಚಾರಕ್ಕೆ ಅವಕಾಶ ಕೊಟ್ಟರೆ ಅಪಾಯ ಎದುರಾಗುವ ಸಾಧ್ಯತೆ ಇದೆ. ಶೀಘ್ರವೆ ಸರಿಪಡಿಸಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು. ಅಲ್ಲಿಯವರೆಗೂ ಈ ಸೇತುವೆ ಮೇಲೆ ಯಾವುದೇ ವಾಹನ ಹಾಗೂ ನಾಗರಿಕರ ಸಂಚಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಅಲ್ಲದೆ ಸ್ಥಳೀಯರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕಾಮಗಾರಿ ಬೇಗನೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಸಂಚಾರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕವಿತಾ, ಸರ್ಕಲ್ ಇನ್ಸ್ಪೆಕ್ಟರ್ ರಾಘವೇಂದ್ರ ಕಾಂಡಿಕೆ, ಪಿಡಬ್ಲುೃಡಿ ಇಂಜಿನಿಯರ್ ಸಂಪತ್ ಕುಮಾರ್ ಇದ್ದರು.