ಫೋಟೊ 12 ವಿಕ್ರಂ 2
ಧಾರವಾಡ: ಅನಾದಿ ಕಾಲದಿಂದಲೂ ಗಂಡು-ಹೆಣ್ಣು ಎಂಬ ತಾರತಮ್ಯವಿದೆ. ಇದೊಂದು ಸಾಮಾಜಿಕ ಪಿಡುಗು. ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಶಿಕ್ಷಾರ್ಹ ಅಪರಾಧ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಈಶಪ್ಪ ಭೂತೆ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆ (ಪಿಸಿ ಮತ್ತು ಪಿಎನ್ಡಿಟಿ) ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದಿನ ಕಾಲದಲ್ಲಿ ಗಂಡು ಮಗುವಿಗೆ ಹೆಚ್ಚಿನ ಪ್ರಾಶಸ್ಱ ನೀಡಿ, ಗಂಡು ಮಗುವಿನ ಜನನದಿಂದ ಮಾತ್ರ ಮುಕ್ತಿ ದೊರೆಯುತ್ತದೆ ಎಂಬ ಭಾವನೆಯಿಂದ ಲಿಂಗ ಪತ್ತೆ ಮಾಡಿಸುವ ಮೂಲಕ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದರು. ಆದರೆ, ಇಂದು ಹೆಣ್ಣಿನ ಶೋಷಣೆ ವಿರುದ್ಧ ಹಲವು ಕಾನೂನುಗಳು ಜಾರಿಯಾಗಿದ್ದರಿಂದ ಹೆಣ್ಣು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ಮಹಿಳೆಯರೂ ಪುರುಷರಷ್ಟು ಸ್ವತಂತ್ರರು. ಒಂದು ಕುಟುಂಬದ ಜವಾಬ್ದಾರಿಯನ್ನು ಹೆಣ್ಣು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾಳೆ. ಶಿಕ್ಷಣ ಪಡೆದವರೇ ಲಿಂಗ ಪತ್ತೆ ಮಾಡಿಸಲು ಮುಂದಾಗುತ್ತಿರುವುದು ಶೋಚನೀಯ ಸಂಗತಿ. ಆಸ್ಪತ್ರೆಗಳಲ್ಲಿ ಲಿಂಗ ಪತ್ತೆ ಮಾಡುವುದನ್ನು ಸಂಪೂರ್ಣ ನಿಲ್ಲಿಸಬೇಕು. ಮಹಿಳೆಯನ್ನು ಗೌರವಿಸುವುದರೊಂದಿಗೆ ಹೆಣ್ಣನ್ನು ರಕ್ಷಿಸುವ ಮಾನವೀಯ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ಜಿಪಂ ಸಿಇಒ ಡಾ. ಬಿ.ಸಿ. ಸತೀಶ, ಹಿರಿಯ ಸಿವಿಲ್ ನ್ಯಾಯಾಧೀಶ ಚಿನ್ನಣ್ಣವರ ಆರ್.ಎಸ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಕುಮಾರ ಮಾನಕರ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಎಸ್.ಎಂ. ಹೊನಕೇರಿ, ಇತರರು ಇದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಶವಂತ ಮದೀನಕರ ಸ್ವಾಗತಿಸಿದರು. ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಬಿ. ನಿಂಬಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು.