ಕೆಂಭಾವಿ : ಶಿಕ್ಷಕರು ಮತ್ತು ಪಾಲಕರು ಮಕ್ಕಳ ಪೌಷ್ಟಿಕತೆ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರೀಮಾ ಪನ್ವಾರ್ ಹೇಳಿದರು.
ವಲಯದ ಮಲ್ಲಾ, ಏವೂರ ಹಾಗೂ ಹೆಗ್ಗಣದೊಡ್ಡಿ ಗ್ರಾಪಂ ವ್ಯಾಪ್ತಿಯ ಹಲವು ಶಾಲೆ ಮತ್ತು ಆರೋಗ್ಯ ಕೇಂದ್ರಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ಶಾಲಾ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಪೌಷ್ಟಿಕತೆ ಕುರಿತು ತಿಳಿವಳಿಕೆ ನೀಡಲು ಜಿಲ್ಲೆಯಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರು ಆರೋಗ್ಯ ಮತ್ತು ಪೌಷ್ಟಿಕತೆ ಕುರಿತು ತರಗತಿ ಆರಂಭಕ್ಕೂ ಮುನ್ನ ಸಂಕ್ಷಿಪ್ತ ಮಾಹಿತಿ ನೀಡಬೇಕು ಎಂದರು.
ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ವಿನೂತನ ಕರ್ಯಕ್ರಮ ಹಮ್ಮಿಕೊಂಡಿದ್ದು, ಈಗಾಗಲೇ ಹಲವು ಶಾಲೆಗಳಲ್ಲಿ ಜಾರಿಗೆ ತರಲಾಗಿದೆ. ಮಕ್ಕಳ ಪೌಷ್ಟಿಕತೆ ಬಗ್ಗೆ ಶಿಕ್ಷಕರು ಹೆಚ್ಚಿನ ನಿಗಾ ವಹಿಸಬೇಕು. ಮನೆಯಲ್ಲಿ ಪಾಲಕರು ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಕಿವಿಮಾತು ಹೇಳಿದರು.
ತಾಪಂ ಇಒ ಬಸವರಾಜ ಸಜ್ಜನ್, ತಾಂತ್ರಿಕ ಸಹಾಯಕ ಶಿವಯೋಗಿ ಹಿರೇಮಠ, ಪಿಡಿಒ ಜಯಾಚಾರ್ಯ ಪುರೋಹಿತ, ಪುತ್ರಪ್ಪಗೌಡ ಇದ್ದರು. ನಂತರ ಸರ್ಕಾರಿ ಪ್ರಾಥಮಿಕ ಶಾಲೆ, ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಿಇಒ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು.