More

    ಮಡಿವಾಳ ಮಾಚಿದೇವರ ಚಿಂತನೆ ಅಳವಡಿಸಿಕೊಳ್ಳಬೇಕು

    ಹಾವೇರಿ: ಮಡಿವಾಳರ ಸಮುದಾಯದವರು ಸರಳ ಸಜ್ಜನಿಕೆಯಿಂದ ಬದುಕು ಕಟ್ಟಿಕೊಂಡವರು. ಶರಣ ಮಡಿವಾಳ ಮಾಚಿದೇವರು ಎಲ್ಲ ಶರಣರ ಬಟ್ಟೆಗಳನ್ನು ಮಡಿ ಮಾಡುವ ಕಾಯಕದಲ್ಲಿ ಕೈಲಾಸವನ್ನು ಕಾಣುತ್ತಿದ್ದರು ಎಂದು ಬಾಲೇಹೊಸೂರ ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.

    ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಮಡಿವಾಳರ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಶುಕ್ರವಾರ ಜಿಲ್ಲಾ ಗುರುಭವನದಲ್ಲಿ ಆಯೋಜಿಸಿದ್ದ ಮಡಿವಾಳ ಮಾಚಿದೇವರ ಜಯಂತಿಗೆ ಚಾಲನೆ ನೀಡಿ ಅವರು ಮಾತನಾಡಿದರು.

    ಮಡಿವಾಳ ಮಾಚಿದೇವರ ಬದುಕು, ಚಿಂತನೆಗಳನ್ನು ಸಮಾಜದವರು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಮುಖ್ಯವಾಹಿನಿಗೆ ಬರಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮೈಲಾರ ಮಹದೇವಪ್ಪನವರ ಜೊತೆಗೂಡಿ ಹೋರಾಟ ನಡೆಸಿ ವೀರಮರಣವನ್ನಪ್ಪಿದ ತಿರಕಪ್ಪ ಮಡಿವಾಳರ ಪುತ್ಥಳಿಯನ್ನು ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣ ಮಾಡಬೇಕಾಗಿದೆ. ಸಮುದಾಯ ಭವನ ನಿರ್ವಣವೂ ಆಗಬೇಕಿದೆ. ಸ್ಥಳೀಯ ಶಾಸಕರು ಈ ಕಾರ್ಯ ನೆರವೇರಿಸಬೇಕು ಎಂದರು.

    ಅಥಣಿ ತಾಲೂಕು ಜಂಜರವಾಡ ಬಸವ ಕುಟೀರದ ಶರಣ ಬಸವರಾಜೇಂದ್ರ ಉಪನ್ಯಾಸ ನೀಡಿ, 12ನೇ ಶತಮಾನದಲ್ಲಿ ಬಸವಣ್ಣನವರ ಜೊತೆಗೂಡಿ ಜಾತ್ಯತೀತ ಹಾಗೂ ಸಮ ಸಮಾಜ ನಿರ್ವಣಕ್ಕೆ ಶ್ರಮಿಸಿದ ಸಮಾಜ ಸುಧಾರಕ ಮಡಿವಾಳ ಮಾಚಿದೇವ. ಕೇವಲ ಬಟ್ಟೆಯ ಕೊಳೆಯನ್ನು ಮಾತ್ರವಲ್ಲದೇ ಮನಸಿನ ಕೊಳೆ ತೊಳೆಯುತ್ತ, ಸಮಾಜದಲ್ಲಿನ ಮೇಲು, ಕೀಳು ಎಂಬ ಭಾವನೆಯನ್ನು ತೊಡೆದು ಹಾಕಿದರು. ವಚನ ಸಾಹಿತ್ಯ ರಕ್ಷಣೆಗೆ ಶ್ರಮಿಸಿದರು. ಈ ಸಮುದಾಯದ ಜನರು ಆರ್ಥಿಕ ಮತ್ತು ಸಾಮಾಜಿಕವಾಗಿ ದುರ್ಬಲರಾಗಿದ್ದಾರೆ. ಮಡಿವಾಳ ಸಮಾಜಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

    ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಜಿಲ್ಲಾ ಮಡಿವಾಳರ ಸಮಾಜ ಸೇವಾ ಸಂಘದ ಅಧ್ಯಕ್ಷ ಸುರೇಶ ಮಡಿವಾಳರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ, ಸಮುದಾಯದ ವಿವಿಧ ಮುಖಂಡರು ಪಾಲ್ಗೊಂಡಿದ್ದರು.

    ಕಾರ್ಯಕ್ರಮಕ್ಕೆ ಮುನ್ನ ನಗರದ ಪುರಸಿದ್ಧೇಶ್ವರ ದೇವಸ್ಥಾನದಿಂದ ಮಡಿವಾಳ ಮಾಚಿದೇವರ ಭಾವಚಿತ್ರದ ಮೆರವಣಿಗೆಗೆ ಚಿತ್ರದುರ್ಗ ಮಡಿವಾಳ ಗುರುಪೀಠದ ಬಸವ ಮಾಚಿದೇವ ಸ್ವಾಮೀಜಿ ಚಾಲನೆ ನೀಡಿದರು. ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗುರುಭವನದವರೆಗೆ ಆಯೋಜಿಸಿದ್ದ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಪುರವಂತಿಕೆ ತಂಡಗಳೊಂದಿಗೆ ಕುಂಭ ಹೊತ್ತ ಮಹಿಳೆಯರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts