ವಿಜಯವಾಣಿ ಸುದ್ದಿಜಾಲ ಶಿಗ್ಗಾಂವಿ (ಗ್ರಾ)
ಶಿಥಿಲಾವಸ್ಥೆಯಲ್ಲಿದ್ದ ಮನೆಯ ಗೋಡೆ ಕುಸಿದು ವ್ಯಕ್ತಿ ಮೃತಪಟ್ಟ ಘಟನೆ ತಾಲೂಕಿನ ಕುನ್ನೂರ ಗ್ರಾಮದ ಪ್ಲಾಟ್ನಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದೆ.
ಕುನ್ನೂರ ಗ್ರಾಮದ ಪ್ಲಾಟ್ನ ನಿವಾಸಿ ಮುಸ್ತಾಕ್ ಶರೀಫಸಾಬ್ ಯರಗುಪ್ಪಿ (27) ಮೃತಪಟ್ಟ ದುರ್ದೈವಿ. ಬುಧವಾರ ಬೆಳಗಿನ ಜಾವ ನಿರಂತರವಾಗಿ ಸುರಿದ ಮಳೆಗೆ ಶಿಥಿಲಗೊಂಡಿದ್ದ ಗೋಡೆ ಕುಸಿದು ಮೇಲೆ ಬಿದ್ದಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಮುಸ್ತಾಕನನ್ನು ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಸ್ತಾಕ್ನ ಪತ್ನಿಗೆ ಕೆಲ ದಿನಗಳ ಹಿಂದಷ್ಟೇ ಹೆರಿಗೆ ಆಗಿದ್ದು ಮಗು ಹಾಗೂ ಕುಟುಂಬಸ್ಥರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಮಗು ಜನಿಸಿದ ಕೆಲವೇ ದಿನಗಳಲ್ಲಿ ತಂದೆ ಮೃತಪಟ್ಟಿದ್ದರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ತಡಸ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿದ್ದಾರೆ.