More

    ಮಲ ಹೊರುವುದು ಕಂಡುಬಂದರೆ ಕ್ರಮ

    ಬೆಳಗಾವಿ: ರಾಜ್ಯದ ಕೆಲವೆಡೆ ಇನ್ನೂ ಮಲ ಹೊರುವ ಪದ್ಧತಿ ಇದೆ ಎಂಬ ದೂರುಗಳು ಆಯೋಗದ ಮುಂದಿವೆ. ಇಂತಹ ಪದ್ಧತಿ ಕಂಡುಬಂದರೆ ಸಂಬಂಧಿಸಿದ ಸಂಸ್ಥೆ ಹಾಗೂ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಆದ್ದರಿಂದ ಈ ಅನಿಷ್ಠ ಪದ್ಧತಿ ಮೇಲೆ ತೀವ್ರ ನಿಗಾ ವಹಿಸಬೇಕು ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಡಾ.ಪಿ.ಪಿ.ವಾವಾ ಹೇಳಿದ್ದಾರೆ.

    ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಫಾಯಿ ಕರ್ಮಚಾರಿಗಳಿಗೆ ನೀಡಲಾದ ಸಹಾಯ-ಸೌಲಭ್ಯಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್’ ದೌರ್ಜನ್ಯ ಎಂದು ಪರಿಗಣಿಸಿ ಈ ಪದ್ಧತಿಯನ್ನು 2013 ರಿಂದ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಜಿಲ್ಲೆಯಲ್ಲಿ ಸಿಎಸ್‌ಆರ್ ಅನುದಾನದಲ್ಲಿ ರೋಬೋಟಿಕ್ ಯಂತ್ರಗಳನ್ನು ಖರೀದಿಸುವ ಬಗ್ಗೆ ಪರಿಶೀಲಿಸಬೇಕು ಎಂದು ಸಲಹೆ ನೀಡಿದರು.

    ಸಫಾಯಿ ಕರ್ಮಚಾರಿಗಳಿಗೆ ಹಾಗೂ ಅವರ ಅವಲಂಬಿತರಿಗೆ ಸಹಾಯ-ಸೌಲಭ್ಯಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆಯಿಂದ ಹಿಡಿದು ಬ್ಯಾಂಕ್‌ನಿಂದ ಸೌಲಭ್ಯ ದೊರಕಿಸುವವರೆಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪ್ರಯತ್ನಿಸಬೇಕು ಎಂದು ಸೂಚಿಸಿದರು.

    ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ಒದಗಿಸಲು ನಗರ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಸಫಾಯಿ ಕರ್ಮಚಾರಿಗಳ ಜತೆಗೆ ಅವರ ಕುಟುಂಬದ ಸದಸ್ಯರಿಗೂ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಜಿಪಂ ಸಿಇಒ ಡಾ.ಎಚ್.ವಿ.ದರ್ಶನ ಮಾತನಾಡಿ, ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕಾರ್ಯ ನಿರ್ವಹಿಸುತ್ತಿದ್ದ 42 ಜನರಿಗೆ ಈಗಾಗಲೇ ತಲಾ 40 ಸಾವಿರ ರೂ. ನೆರವು ನೀಡಲಾಗಿದೆ. ಎಲ್ಲರಿಗೂ ಗುರುತಿನ ಚೀಟಿಗಳನ್ನೂ ನೀಡಲಾಗಿದ್ದು, ನರೇಗಾ ಉದ್ಯೋಗ ಚೀಟಿಗಳನ್ನು ಒದಗಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಯಡಿ 23 ಜನರಿಗೆ ಸೌಲಭ್ಯ ಒದಗಿಸಲಾಗಿದೆ ಎಂದು ತಿಳಿಸಿದರು.

    ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಹುಲ್ ಮಾತನಾಡಿ, ಸಫಾಯಿ ಕರ್ಮಚಾರಿಗಳು ಸಲ್ಲಿಸುವ ಯಾವುದೇ ಸಾಲ ಸೌಲಭ್ಯಗಳ ಅರ್ಜಿಗಳು ತಿರಸ್ಕೃತಗೊಳ್ಳದಂತೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ, ಈಶ್ವರ ಉಳ್ಳಾಗಡ್ಡಿ ಹಾಗೂ ಸಫಾಯಿ ಕರ್ಮಚಾರಿಗಳ ಸಂಘದ ಪದಾಧಿಕಾರಿಗಳು, ಸ್ವಯಂಸೇವಾ ಸಂಘಗಳ ಸದಸ್ಯರು ಪಾಲ್ಗೊಂಡಿದ್ದರು.

    ಅನುಕಂಪದ ನೌಕರಿ ಇಲ್ಲ: ಹೊರಗುತ್ತಿಗೆ ನೌಕರರು ಕರ್ತವ್ಯದಲ್ಲಿ ಮರಣ ಹೊಂದಿದರೆ ಅನುಕಂಪದ ಆಧಾರದ ಮೇಲೆ ಯಾವ ರೀತಿ ಉದ್ಯೋಗ ನೀಡಲಾಗುತ್ತಿದೆ ಎಂದು ಸಫಾಯಿ ಕರ್ಮಚಾರಿ ಸಂಘದ ಪದಾಧಿಕಾರಿಗಳು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಹೊರಗುತ್ತಿಗೆ ನೌಕರರು ಕುಟುಂಬಕ್ಕೆ ಅನುಕಂಪದ ಆಧಾರದ ಮೇಲೆ ಕಾಯಂ ನೌಕರಿ ನೀಡಲು ಅವಕಾಶವಿಲ್ಲ. ಅವರ ಕುಟುಂಬದ ಇತರ ಸದಸ್ಯರಿಗೆ ಹೊರಗುತ್ತಿಗೆ ಆಧಾರದ ಮೇಲೆ ಉದ್ಯೋಗ ಒದಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts