ಮುಂಡರಗಿ: ಪಟ್ಟಣ ಸೇರಿ ತಾಲೂಕಿನ ವಿವಿಧೆಡೆ ಭಾನುವಾರ ಮಧ್ಯರಾತ್ರಿ ಭಾರಿ ಮಳೆ ಸುರಿದಿದೆ. ಮಳೆಯ ರಭಸಕ್ಕೆ ಬಹುತೇಕ ಕಡೆಗಳಲ್ಲಿ ಜಮೀನುಗಳ ಬದುವುಗಳಲ್ಲಿ ನೀರು ಸಂಗ್ರಹಗೊಂಡಿದೆ. ಕೆಲವೆಡೆ ಒಡ್ಡುಗಳು ಹೊಡೆದು ಹೋಗಿವೆ.
ಪಟ್ಟಣ ಸೇರಿ ತಾಲೂಕಿನ ವಿವಿಧ ಕಡೆಗಳಲ್ಲಿ ಆಗಾಗ ಮಳೆ ಸುರಿಯುತ್ತಿರುವುದರಿಂದ ರೈತರು ಈ ವರ್ಷ ಉತ್ತಮ ಇಳುವರಿ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ಕೃಷಿ ಚಟುವಟಿಕೆ ಪ್ರಾರಂಭಗೊಂಡಿವೆ. ಕೆಲವೆಡೆ ಮುಂಗಾರು ಬಿತ್ತನೆಗೆ ರೈತರು ಜಮೀನುಗಳನ್ನು ಹದ ಮಾಡಿಕೊಂಡಿದ್ದರೆ, ಇನ್ನು ಕೆಲವೆಡೆ ಹರಗುವ ಕಾರ್ಯ ಜೋರಾಗಿ ನಡೆಯುತ್ತಿದೆ. ಶನಿವಾರ ಸುರಿದ ಆಲಿಕಲ್ಲು ಮಳೆಗೆ ಕೆಲವೆಡೆ ನೀರಾವರಿ ಪ್ರದೇಶದಲ್ಲಿ ಬಿತ್ತನೆ ಮಾಡಿದ್ದ ಹತ್ತಿ, ಸೂರ್ಯಕಾಂತಿ ಬೆಳೆ ನಾಶವಾಗಿದೆ.