ಬೆಳಗಾವಿ: ರಾಜ್ಯದಲ್ಲಿ ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಮನೆಗಳ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಹೆಚ್ಚು ಬೇಡಿಕೆಗಳು ಬರುತ್ತವೆ. ಆದ್ದರಿಂದ ಅತಿವೃಷ್ಟಿಯಾದ ಸಂದರ್ಭದಲ್ಲಿ ಕೂಡಲೇ ತಾಂತ್ರಿಕ ತಂಡ ನಿಯೋಜಿಸಿ ಬೇಗ ಸಮೀೆ ಕಾರ್ಯ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
ಅತಿವೃಷ್ಟಿ ಹಿನ್ನೆಲೆಯಲ್ಲಿ ಬೆಳಗಾವಿ ಸೇರಿ ಹನ್ನೊಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಂಗಳವಾರ ಜರುಗಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಮನೆಹಾನಿಗೀಡಾದ ಕುಟುಂಬಗಳು ಪರಿಹಾರದಿಂದ ವಂಚಿತಗೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಕೊಯ್ನಾ, ರಾಜಾಪುರ ಸೇರಿದಂತೆ ಪ್ರತಿಯೊಂದು ಜಲಾಶಯಗಳ ಮಟ್ಟ ಹಾಗೂ ನೀರು ಬಿಡುಗಡೆಯ ಕುರಿತು ನಿಗಾ ವಹಿಸಬೇಕು. ಖಾನಾಪುರದಲ್ಲಿ ಮಳೆ ಜಾಸ್ತಿಯಾದಾಗ ಮಲಪ್ರಭಾ ನದಿ ನೀರು ಹರಿವು ಹೆಚ್ಚಾಗುತ್ತದೆ. ಆ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಜೂನ್ ತಿಂಗಳಿನಲ್ಲಿ ವಾಡಿಕೆ ಮಳೆಗಿಂತ ಶೇ.21 ರಷ್ಟು ಮಳೆ ಕಡಿಮೆಯಾಗಿದ್ದು, ಜುಲೈನಲ್ಲಿ ವಾಡಿಕೆ ಮಳೆ 191 ಮೀ.ಮೀ. ಮಳೆಯಾಗಿದೆ. 2022ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 981 ಮನೆಗಳಿಗೆ ಅಲ್ಪಸ್ವಲ್ಪ ಹಾನಿಯಾಗಿರುತ್ತದೆ.324 ಹೆಕ್ಟೇರ್ ಕೃಷಿ ಬೆಳೆ ಹಾಗೂ 10.07 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿಯಾಗಿದೆ ಎಂದು ವಿವರಿಸಿದರು.
ಮಹಾನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ಜಿಪಂ ಸಿಇಒ ದರ್ಶನ್ ಎಚ್.ವಿ., ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ.ರಾಜೀವ ಕೂಲೇರ್ ಇತರರಿದ್ದರು.