ಧಾರವಾಡ: ಕರೊನಾ ಸಂದರ್ಭದಲ್ಲೇ ಬಕ್ರೀದ್ ಹಬ್ಬ ಬಂದಿದ್ದು, ಮುಂಜಾಗ್ರತೆ ಕ್ರಮವಾಗಿ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಅವರು ಮುಸ್ಲಿಂ ಸಮಾಜದ ಮುಖಂಡರೊಂದಿಗೆ ಶಾಂತಿಸಭೆ ನಡೆಸಿದರು.
ನಗರದ ಪೊಲೀಸ್ ಹೆಡ್ ಕ್ವಾರ್ಟರ್ಸ್ನ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಕೆಲ ಕಟ್ಟುನಿಟ್ಟಿನ ಆದೇಶಗಳನ್ನು ನೀಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಕ್ರೀದ್ ಹಬ್ಬದಂದು ಮುಸ್ಲಿಂ ಸಮುದಾಯದವರು ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವಂತಿಲ್ಲ. ಬದಲಿಗೆ ಮಸೀದಿ ಒಳಗೆ ಕೇವಲ 50 ಜನ ಪರಸ್ಪರ ಅಂತರ ಕಾಪಾಡಿ ನಮಾಜ್ ಮಾಡಬಹುದು ಎಂದರು.
ಜಮಾತ್ನವರು ಮಸೀದಿ ಮುಂಭಾಗದಲ್ಲಿ ಕಡ್ಡಾಯವಾಗಿ ಸ್ಯಾನಿಟೈಸರ್, ಮಾಸ್ಕ್ಗಳನ್ನು ಇಡಬೇಕು. ಒಂದು ಮಸೀದಿಯಲ್ಲಿ 50- 50 ಜನರಂತೆ ಪಾಳಿಯಲ್ಲಿ ತೆರಳಿ ನಮಾಜ್ ಮಾಡಬಹುದು. ಗುಂಪುಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ. ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಎಲ್ಲ ಸಮುದಾಯದವರೂ ಸಹಕಾರ ನೀಡಬೇಕು ಎಂದರು.
ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಇಬ್ಬರು ಪಿಎಸ್ಐಗಳಿಗೆ ಕರೊನಾ ಪಾಸಿಟಿವ್ ಬಂದಿದೆ. ವಿವಿಧ ಠಾಣೆಗಳ 12 ಪೊಲೀಸ್ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಹೀಗಾಗಿ ಜನರಿಗಾಗಿಯೇ ಕೆಲಸ ಮಾಡುತ್ತಿರುವ ಪೊಲೀಸರಿಗೆ ಎಲ್ಲರೂ ಸಹಕಾರ ನೀಡಬೇಕು ಎಂದರು.
ಡಿವೈಎಸ್ಪಿ ರವಿ ನಾಯ್ಕ ಹಾಗೂ ಪೊಲೀಸ್ ಸಿಬ್ಬಂದಿ, ವಿವಿಧ ಜಮಾತ್ಗಳ ಮುಸ್ಲಿಂ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.