ಹಾವೇರಿ: ಸಮಾಜದ ಎಲ್ಲ ರಂಗಗಳಲ್ಲಿ ಮಹಿಳೆಯರು ಪ್ರಸ್ತುತವಾಗಿ ಮುಂಚೂಣಿಯಲ್ಲಿದ್ದಾರೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಯಾದವ ವನಮಾಲಾ ಆನಂದರಾವ್ ಹೇಳಿದರು.
ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ಗುರುವಾರ ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅಭಿಯೋಜನಾ ಇಲಾಖೆ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣು ತಾಯಿಯಾಗಿ, ಮಗಳಾಗಿ, ಅಕ್ಕ-ತಂಗಿಯಾಗಿ ಹಾಗೂ ಮಡದಿಯಾಗಿ ತನ್ನ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುತ್ತಾಳೆ. ಮನೆಯ ಕೆಲಸ ಮಾಡಿಕೊಂಡು ಹೊರಗಡೆ ಹೋಗಿ ದುಡಿಯುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರುತ್ತಿದ್ದಾಳೆ ಎಂದು ಶ್ಲಾಘಿಸಿದರು.
ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಪಿ.ಸಿ. ಬಣಕಾರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನಲ್ ವಕೀಲೆ ರಾಜೇಶ್ವರಿ ಚಕ್ಕಲೇರ ಮಹಿಳಾ ಕಾನೂನುಗಳ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ನಿಂಗನಗೌಡ ಪಾಟೀಲ, ಕಿರಣ ಕಿಣಿ, ಪ್ರಕಾಶ ವಿ., ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು, ರವಿಪ್ರಕಾಶ ಆವಿನ, ಸರ್ಕಾರಿ ಅಭಿಯೋಜಕ ಎಸ್.ಎಂ.ಗೆಜ್ಜಿಹಳ್ಳಿ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಈಶ್ವರ ನಂದಿ, ಇತರರು ಉಪಸ್ಥಿತರಿದ್ದರು.