ಮೈಸೂರು: ಮಹಿಳೆಯರು ತಮ್ಮ ಹಕ್ಕುಗಳನ್ನು ಕೇಳಿ ಪಡೆಯಬೇಕು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಶೈಕ್ಷಣಿಕ ಡೀನ್ ಪ್ರೊ.ಎನ್. ಲಕ್ಷ್ಮೀ ಕರೆ ನೀಡಿದರು.
ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವತಿಯಿಂದ ವಿವಿಯ ಕಾವೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿ, ‘ಪ್ರತಿಯೊಂದು ಹೆಣ್ಣು ತಮ್ಮ ಹಕ್ಕನ್ನು ಚಲಾಯಿಸಬೇಕು, ಆಕೆ ಸ್ವತಂತ್ರವಾಗಿ ಸಬಲೀಕರಣ ಹೊಂದಬೇಕು’ ಎಂಬುದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯವಾಗಿತ್ತು. ಅಂಬೇಡ್ಕರ್ ಅವರ ಆಶಯದಂತೆ ಹೆಣ್ಣು ಮಕ್ಕಳು ಶಿಕ್ಷಣ ಪಡೆದು ಸಂವಿಧಾನ ನಮಗೆ ನೀಡಿರುವ ಹಕ್ಕುಗಳನ್ನು ಪಡೆಯಬೇಕು ಎಂದರು.
ಆಧುನಿಕ ಮಹಿಳೆ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಬರುತ್ತಿದ್ದಾಳೆ. ಎಲ್ಲ ಕ್ಷೇತ್ರದಲ್ಲಿ ಆಕೆ ಸಾಧನೆ ತೋರಿದರೂ ಆಕೆ ಪರಿಪೂರ್ಣ ಸಬಲೀಕರಣ ಹೊಂದಿಲ್ಲ ಎಂಬುದು ಬೇಸರದ ಸಂಗತಿ. ಮಹಿಳೆಯರು ತಪ್ಪುಗಳ ವಿರುದ್ಧ ಧ್ವನಿ ಎತ್ತಬೇಕು. ಮಹಿಳೆಯರು ಮಹಿಳೆಯರನ್ನು ದೂಷಿಸದೆ ಪ್ರೋತ್ಸಾಹಿಸುವ ಕೆಲಸ ಮಾಡಬೇಕು ಎಂದು ಹೇಳಿದರು.