ಯಾದಗಿರಿ: ಹೆಣ್ಣು ಸಂಸಾರದ ಕಣ್ಣು, ದೇಶದ ಕಣ್ಣು, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ, ಹೆಣ್ಣಿನ ಬಗ್ಗೆ ಯಾರೂ ಸಹ ಕೀಳರಿಮೆ ಹೊಂದಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಸಲಹೆ ನೀಡಿದರು.
ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಕಾರ್ಯಕ್ರಮ ಅಂಗವಾಗಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಗಂಡು ಮತ್ತು ಹೆಣ್ಣು ಇಬ್ಬರೂ ಸಮಾನರು ಎಂಬ ಮನಸ್ಥಿತಿ ಬರಬೇಕಾಗಿದೆ. ಹೆಣ್ಣು ಭ್ರೂಣಹತ್ಯೆ, ವರದಕ್ಷಿಣೆ, ಬಾಲ್ಯವಿವಾಹ, ಬಡತನ, ಅನಕ್ಷರತೆ, ಲಿಂಗತಾರತಮ್ಯ, ಮುಂತಾದ ಸಮಸ್ಯೆಗಳನ್ನು ಶಿಕ್ಷಣವಂತರಾದ ಮಾತ್ರ ಹೋಗಲಾಡಿಸಲು ಸಾಧ್ಯವಾಗುತ್ತದೆ ಎಂದರು.
ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಮಾತನಾಡಿ, ಹೆಣ್ಣು ಮಗುವಿಗೆ ಹೆಚ್ಚಿನ ಅಕಾಶಗಳನ್ನು ಸೃಷ್ಟಿಸುವುದು ಮತ್ತು ಹೆಣ್ಣು ಮಗುವಿನತ್ತ ಸಮಾಜ ದೃಷ್ಟಿಕೋನ ಬದಲಿಸಿಬೇಕು. ಹೆಣ್ಣು ಧೈರ್ಯವಂತಳಾಗಿ ಬಾಳಬೇಕು. ಶಾಲೆಯಲ್ಲಿ ಶಿಕ್ಷಕರು ಹೆಣ್ಣುಮಕ್ಕಳಿಗೆ ಆತ್ಮಸ್ಥೈರ್ಯ ತುಂಬಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರ ಹೊನೊಲೆ ಮಾತನಾಡಿ, ಭಾರತದಲ್ಲಿ ಅಕ್ಷರಕ್ರಾಂತಿ ಮಾಡಿದ ದೇಶದ ಮೊದಲ ಮಹಿಳಾ ಶಿಕ್ಷಕಿ, ಮಹಿಳೆಯರಿಗೆ ಅಕ್ಷರ ಜ್ಞಾನ ನೀಡಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದವರು ಸಾವಿತ್ರಿಬಾಯಿ ಫುಲೆ. ಇಂದು ಮಹಿಳೆಯರ ಸ್ಥಿತಿಯನ್ನು ಮೇಲಕ್ಕೆ ತರಲು ಹಲವು ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಕುಟುಂಬದಲ್ಲಿ ಗಂಡು ಮಕ್ಕಳಿಗೆ ಪ್ರಾಮುಖ್ಯತೆ ಇರುವ ಸಂದರ್ಭದಲ್ಲಿಯೇ ನಾನು ಹೆಣ್ಣಾಗಿ ಹುಟ್ಟಿ , ಹಳ್ಳಿಯಲ್ಲಿಯೇ ಶಿಕ್ಷಣ ಪಡೆದು ಪ್ರತಿಭಾವಂತೆಯಾಗಿ ಹೆತ್ತವರ ಮನಸ್ಸು ಗೆದ್ದು ಇಂದು ಡಿಸಿಯಾಗಿ ನಿಮ್ಮ ಮುಂದೆ ನಿಂತಿದ್ದೇನೆ. ಹೆಣ್ಣು ಮಕ್ಕಳು ಜೀವನದಲ್ಲಿ ಉತ್ಕೃಷ್ಟ ಗುರಿ ಇಟ್ಟುಕೊಂಡು ಉನ್ನತ ಅಧಿಕಾರಿಗಳಾಗಿ ಹೊರಹೊಮ್ಮಿ ಎಂದು ಕಿವಿಮಾತು ಹೇಳಿದರು.