More

    ಮಾದಪ್ಪನ ಹುಂಡಿಯಲ್ಲಿ 1.82 ಕೋಟಿ ರೂ. ಸಂಗ್ರಹ

    ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಎಣಿಕೆಯಲ್ಲಿ ಈ ಬಾರಿ 22 ದಿನಗಳ ಅವಧಿಯಲ್ಲಿ 1.82 ಕೋಟಿ ರೂ. ಸಂಗ್ರಹವಾಗಿದೆ.

    ಮ.ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬೆಳಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ಮಠದ ಪೀಠಾಧಿಪತಿ ವಿದ್ವಾನ್ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮರಾ ಕಣ್ಗಾವಲು ಹಾಗೂ ಪೊಲೀಸ್ ಬಂದೋಬಸ್ತ್‌ನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯ ಸಂಜೆ 6 ಗಂಟೆವರೆಗೂ ನಡೆಯಿತು.

    ಈ ಬಾರಿ ಹೋಳಿ ಹುಣ್ಣಿಮೆ, ಯುಗಾದಿ ಜಾತ್ರೆ ಹಾಗೂ ಸರ್ಕಾರಿ ರಜಾ ದಿನಗಳಂದು ಮಾದಪ್ಪನ ಸನ್ನಿಧಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿದ್ದ ಭಕ್ತರು, ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹರಕೆಯ ರೂಪದಲ್ಲಿ ಹಣ, ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದರು.

    ಈ ಬಾರಿ 22 ದಿನದ ಅವಧಿಯಲ್ಲಿ 1,82,30,192 ರೂ. ನಗದು, 85 ಗ್ರಾಂ ಚಿನ್ನ ಹಾಗೂ 1.060 ಕೆ.ಜಿ. ಬೆಳ್ಳಿ ಸಂಗ್ರಹವಾಗಿದೆ. ಕಳೆದ ಬಾರಿ 26 ದಿನದ ಅವಧಿಯಲ್ಲಿ 2,86,17,698 ರೂ. ನಗದು, 90 ಗ್ರಾಂ ಚಿನ್ನ ಹಾಗೂ 2.825 ಕೆ.ಜಿ. ಬೆಳ್ಳಿ ಸಂಗ್ರಹವಾಗಿತ್ತು. ಎಣಿಕೆ ಸಂದರ್ಭದಲ್ಲಿ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಬಸವರಾಜು, ಎಸ್‌ಡಿಎ ಮಹದೇವಸ್ವಾಮಿ, ಪಾರುಪತ್ತೆದಾರ ಮಲ್ಲಿಕಾರ್ಜುನ, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts