More

    ಮಾಯಕೊಂಡ ಬರ ಘೋಷಣೆಗೆ ಪ್ರಯತ್ನ  -ಶಾಸಕ ಬಸವಂತಪ್ಪ ಹೇಳಿಕೆ  -ಹಡಪದ ಅಪ್ಪಣ್ಣ ಜಯಂತ್ಯುತ್ಸವ

    ದಾವಣಗೆರೆ: ಮಾಯಕೊಂಡ ಕ್ಷೇತ್ರವನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ ರೈತರಿಗೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನಿಸುವುದಾಗಿ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು.
    ತಾಲೂಕಿನ ಕಂದಗಲ್ಲು ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಿಜಗುಣ ಹಡಪದ ಅಪ್ಪಣ್ಣ ಜಯಂತ್ಯುತ್ಸವದಲ್ಲಿ ಮಾತನಾಡಿದರು.
    ದಾವಣಗೆರೆ ತಾಲೂಕು ಅರ್ಧ ನೀರಾವರಿ, ಇನ್ನರ್ಧ ಒಣಭೂಮಿ ಪ್ರದೇಶ ಹೊಂದಿರುವುದರಿಂದ ಬರಪೀಡಿತ ತಾಲೂಕು ಘೋಷಣೆಗೆ ತೊಡಕಿದೆ. ಹೀಗಾಗಿ, ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಒಣಭೂಮಿ ಹೊಂದಿರುವ ಹೋಬಳಿಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲು ಮುಖ್ಯಮಂತ್ರಿ ಮತ್ತು ಸಂಬಂಧಪಟ್ಟ ಸಚಿವರಿಗೆ ಮನವರಿಕೆ ಮಾಡಿದ್ದೇನೆ ಎಂದು ತಿಳಿಸಿದರು.
    ಪ್ರಸಕ್ತ ವರ್ಷ ಮಳೆ ಅಭಾವದಿಂದ ಬಿತ್ತನೆ ಮಾಡಿದ ಮೆಕ್ಕೆಜೋಳ, ರಾಗಿ, ಜೋಳದ ಬೆಳೆಗಳು ಒಣಗಿ ರೈತರು ಕಂಗಾಲಾಗಿದ್ದಾರೆ. ಪರಿಹಾರಕ್ಕಾಗಿ ಸರ್ಕಾರದ ಮೇಲೆ ನಿರಂತರ ಒತ್ತಡ ಹಾಕುವ ಮೂಲಕ ಬರಗಾಲದಿಂದ ತತ್ತರಿಸಿರುವ ರೈತರ ಬೆನ್ನಿಗೆ ಸದಾ ನಿಲ್ಲುವೆ. ಏನೇ ಸಮಸ್ಯೆಗಳಿದ್ದರೂ ಗಮನಕ್ಕೆ ತಂದರೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.
    ಹಡಪದ ಅಪ್ಪಣ್ಣ ಸಮಾಜ ಕಾಯಕದಲ್ಲಿ ನಿಷ್ಠೆ, ಪ್ರಾಮಾಣಿಕತೆ ಹೊಂದಿದ್ದು ಅತಿ ಹಿಂದುಳಿದ ಹಡಪದ ಅಪ್ಪಣ ಮತ್ತು ಮಡಿವಾಳ ಸಮಾಜಗಳಿಗೆ ಮೀಸಲಾತಿ ಸಿಕ್ಕು ಎರಡೂ ಸಮಾಜಗಳು ಅಭಿವೃದ್ಧಿಯೊಂದಿಗೆ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಪ್ರತಿಯೊಬ್ಬರೂ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು, ಹಡಪದ ಸಮಾಜಕ್ಕೆ ಸಮುದಾಯ ಭವನ ನಿರ್ಮಿಸಿ ಕೊಡಲಾಗುವುದು ಎಂದರು.
    ಜಿಪಂ ಮಾಜಿ ಸದಸ್ಯ ತೇಜಸ್ವಿ ಪಟೇಲ್ ಮಾತನಾಡಿ, ಕೆ.ಎಸ್.ಬಸವಂತಪ್ಪ ಅವರು ಮೊದಲ ಬಾರಿಗೆ ಶಾಸಕರಾಗಿರುವುದರಿಂದ ಕ್ಷೇತ್ರದ ಅಭಿವೃದ್ಧಿಗೆ ಕಾಲಾವಕಾಶ ಕೊಡಬೇಕು. ಶಾಸಕರು ಸಾಮಾಜಿಕ ಕಳಕಳಿ ಹೊಂದಿರುವ ವ್ಯಕ್ತಿಯಾಗಿದ್ದು ಕ್ಷೇತ್ರದ ಅಭಿವೃದ್ಧಿ ಜತೆಗೆ ಜನರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ ಎಂಬ ಭರವಸೆಯಿದೆ ಎಂದರು.
    ವಿಜಯಪುರ ಜಿಲ್ಲೆಯ ತಂಗಡಗಿ ಸುಕ್ಷೇತ್ರದ ಶ್ರೀ ಅನ್ನದಾನಿ ಭಾರತಿ ಹಡಪದ ಅಪ್ಪಣ್ಣ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಲ್ಲಿಕಾರ್ಜುನ ಗೌಡ್ರು, ಕೆ.ಸಿ. ಮಂಜುನಾಥ್, ಬಸಣ್ಣ, ಶಶಿಧರ್, ಕೋಟೆಪ್ಪ, ಚಂದ್ರಪ್ಪ, ಪರಮೇಶ್ವರಪ್ಪ, ಮೈಲಾರ ಹಡಪದ ಅಪ್ಪಣ್ಣ ಸಮಾಜದ ಅಧ್ಯಕ್ಷ ಎಚ್.ನಾಗರಾಜ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts