More

    ಮಾ.25 ರಿಂದ ಎಸ್. ಎಸ್.ಎಲ್.ಸಿ ಪರೀಕ್ಷೆ:20,472 ವಿದ್ಯಾರ್ಥಿಗಳು ನೋಂದವಣಿ

    ಹಾಸನ: ಈ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಮಾ.25 ರಿಂದ ಏ.6 ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ 20,472 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ತಿಳಿಸಿದರು.
    ಪರೀಕ್ಷಾ ಸಿದ್ಧತೆಗಳ ಬಗ್ಗೆ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಗುರುವಾರ ಪರಿಶೀಲಿಸಿ ಮಾತನಾಡಿದ ಅವರು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳಿಗೆ ಪರೀಕ್ಷೆ ಬರೆಯಲು ಸೂಕ್ತ ಆಸನಗಳ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ನಿರ್ವಹಣೆ, ಪರೀಕ್ಷೆ ಬರೆಯಲು ಸೂಕ್ತ ಗಾಳಿ ಬೆಳಕಿನ ವ್ಯವಸ್ಥೆ, ಪರೀಕ್ಷೆ ನಡೆಯುವ ಎಲ್ಲಾ ಕೊಠಡಿಗಳಿಗೆ ಸಿ.ಸಿ ಟಿವಿ ಅಳವಡಿಸಬೇಕು ಎಂದು ತಿಳಿಸಿದರು.
    ಪರೀಕ್ಷಾ ಕೇಂದ್ರವು ಇಂಟರ್‌ನೆಟ್ ಸೌಲಭ್ಯವನ್ನು ಹೊಂದಿರಬೇಕು. ಪರೀಕ್ಷಾ ಕೇಂದ್ರದಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಬೇಕು. ಜಿಲ್ಲಾ ಹಂತದಲ್ಲಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಿ ಪರಿಶೀಲನೆಗೆ ತ್ರಿಸದಸ್ಯ ಸಮಿತಿ ರಚನೆ ಮಾಡುಬೇಕು. ಪ್ರಶ್ನೆ ಪತ್ರಿಕೆ ಸರಬರಾಜು ಮಾಡಲು ಮಾರ್ಗಾಧಿಕಾರಿಗಳ ನೇಮಕ, ಪರೀಕ್ಷಾ ಕೇಂದ್ರಕ್ಕೆ ಸ್ಥಾನಿಕ ಜಾಗೃತ ದಳ ನೇಮಕ, ಪರೀಕ್ಷಾ ಕೊಠಡಿ ಮೇಲ್ವಿಚಾರಕರನ್ನು ಸಂಬಂಧಿಸಿದ ವಿಷಯ ಶಿಕ್ಷಕರನ್ನು ಹೊರತುಪಡಿಸಿ ನೇಮಕ ಮಾಡಿಕೊಳ್ಳಬೇಕು ಎಂದು ಹೇಳಿದರು.
    ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜವರೇಗೌಡ ಮಾತನಾಡಿ, ಜಿಲ್ಲೆಯಲ್ಲಿ 537 ಶಾಲೆಗಳು ನೋಂದಣಿಯಾಗಿದ್ದು, 73 ಪರೀಕ್ಷಾ ಕೇಂದ್ರಗಳಿವೆ. ಪರೀಕ್ಷೆಗೆ 20,472 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರ ಸಂಖ್ಯೆ 14, ಪರೀಕ್ಷಾ ಕೇಂದ್ರದ ಉಪ ಮುಖ್ಯ ಅಧೀಕ್ಷಕರ ಸಂಖ್ಯೆ 14. ಪರೀಕ್ಷಾ ಕೇಂದ್ರದ ಕಸ್ಟೋಡಿಯನ್‌ರವರ ಸಂಖ್ಯೆ 73, ಪರೀಕ್ಷಾ ಕೇಂದ್ರದ ಮೊಬೈಲ್ ಸ್ವಾಧೀನಾಧಿಕಾರಿಗಳ73, ಪರೀಕ್ಷಾ ಕೇಂದ್ರದ ಮಾರ್ಗಾಧಿಕಾರಿಗಳ ಸಂಖ್ಯೆ 27, ಪರೀಕ್ಷಾ ಕೇಂದ್ರದ ಸ್ಥಾನಿಕ ಜಾಗೃತಾದಳದ ಸಂಖ್ಯೆ 81, ಪರೀಕ್ಷಾ ಕೇಂದ್ರಕ್ಕೆ ಕೊಠಡಿ ಮೇಲ್ವಿಚಾರಕರ ನೇಮಕ 8 ತಾಲೂಕಿನಲ್ಲಿ ಆಗಿದೆ ಎಂದರು.
    ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ನಾಗೇಶ್ ಎ. ರಾಯ್ಕರ್ ಮಾತನಾಡಿ, ಶಾಲಾ ಪರೀಕ್ಷಾ ಕೊಠಡಿಗಳನ್ನು ಸ್ವಚ್ಛತೆಯಿಂದ ಕಾಪಾಡಬೇಕು, ಕಡ್ಡಾಯವಾಗಿ ಸಿ.ಸಿ ಕ್ಯಾಮರಾಗಳನ್ನು ಪರೀಕ್ಷಾ ಕೊಠಡಿಯಲ್ಲಿ ಹಾಕಬೇಕು. ಮಕ್ಕಳಿಗೆ ಪರೀಕ್ಷೆ ಬರೆಯಲು ಸೂಕ್ತ ಆಸನಗಳ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
    ಶಿಕ್ಷಣ ಶಿಕ್ಷಕರ ತರಬೇತಿ ಮಹಾವಿದ್ಯಾಲಯ ಪ್ರಾಂಶುಪಾಲ ಸೋಮಶೇಖರ್ ಮಾತನಾಡಿ, ಪರೀಕ್ಷಾ ಕೊಠಡಿಯಲ್ಲಿ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಪರೀಕ್ಷಾ ಕೊಠಡಿಗಳನ್ನು ನೋಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಶುದ್ದ ಗಾಳಿ, ಪರಿಶುದ್ದ ನೀರು ನೀಡಬೇಕು. 200 ಮೀಟರ್ ವ್ಯಾಪ್ತಿಯಲ್ಲಿ ಪೋಷಕರು ಇರಬೇಕು ಎಂದು ತಿಳಿಸಿದರು.
    ಡಯಟ್‌ನ ಪ್ರಾಂಶುಪಾಲ ಪುಷ್ಪಲತಾ ಮಾತನಾಡಿ, ಪರೀಕ್ಷಾ ಕೊಠಡಿಗಳನ್ನು ಯಾವುದೇ ತೊಂದರೆ ಇಲ್ಲದಂತೆ ಸೂಕ್ಮವಾಗಿ ನೋಡಿಕೊಳ್ಳಬೇಕು. ಪರೀಕ್ಷಾ ಪವಿತ್ರತೆಯನ್ನು ಕಾಪಾಡಬೇಕು,ವಿದ್ಯಾರ್ಥಿಗಳಿಗೆ ಹೆಚ್ಚು ಉತ್ತೇಜನ ನೀಡಬೇಕು ಎಂದು ತಿಳಿಸಿದರು.
    ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ ತಾಲೂಕಿನ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ಅಧಿಕಾರಿಗಳು ಇದ್ದರು.

    ಪರೀಕ್ಷೆ ಕೇಂದ್ರದ ಸುತ್ತ ನಿಷೇಧಾಜ್ಞೆ:
    ಜಿಲ್ಲೆಯ 73 ಪರೀಕ್ಷಾ ಕೇಂದ್ರಗಳಲ್ಲಿ 2024ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಮಾ.25ರಿಂದ ಏ.6ವರಗೆ ನಡೆಯಲಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಸಲು ಸೆಕ್ಷನ್ 144ರಡಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಡಿಸಿ ಆದೇಶ ಹೊರಡಿಸಿದ್ದಾರೆ.
    ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಬೇಕು. ವಿದ್ಯಾರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು,ಸಿಬ್ಬಂದಿಗಳು ಹೊರತುಪಡಿಸಿ ಇತರರು ಯಾರು ನಿಷೇಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲವೆಂದು ನಿಬರ್ಂಧಿಸಿ ಆದೇಶಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts