ಶನಿವಾರಸಂತೆ: ಗಾಳಿ ಸಹಿತ ಮಳೆ ಮುಂದುವರಿದಿದ್ದು, ಕೆಲವೆಡೆ ವಿದ್ಯುತ್ ಕಂಬ ಮುರಿದು ಬಿದ್ದು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.
ಸೋಮವಾರ ರಾತ್ರಿ ಸುರಿದ ಮಳೆಗೆ ಆಲೂರು-ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲಂಬಿ ಗ್ರಾಮದ ಗಾಂಧಿ ಕಾಲನಿ ನಿವಾಸಿ ಅಯ್ಯಪ್ಪ ಮತ್ತು ವೇದಾವತಿ ಎಂಬುವರಿಗೆ ಸೇರಿದ ವಾಸದ ಮನೆಗಳು ನೆಲಕ್ಕುರುಳಿವೆ. ಈ ವೇಳೆ ಮನೆಯೊಳಗಿದ್ದವರು ತಕ್ಷಣ ಹೊರಬಂದಿದ್ದು, ಅಪಾಯದಿಂದ ಪಾರಾಗಿದ್ದಾರೆ. ನಂತರ ಪಕ್ಕದ ಮನೆಗಳಲ್ಲಿ ಆಶ್ರಯ ಪಡೆದಿದ್ದಾರೆ.
ಆಲೂರು-ಸಿದ್ದಾಪುರ ವ್ಯಾಪ್ತಿಯ ಕೆಲವು ಕಡೆಗಳಲ್ಲಿ ಗಾಳಿ ಮಳೆಗೆ ಮರದ ರೆಂಬೆಗಳು ವಿದ್ಯುತ್ ತಂತಿ ಮೇಲೆ ಮುರಿದು ಬಿದ್ದಿವೆ. ಮಾಲಂಬಿ, ಕಣಿವೆ ಬಸವನಹಳ್ಳಿ ಗ್ರಾಮದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯ ಉಂಟಾಗಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.