More

    ಮೆಗಾ ಇ-ಲೋಕ ಅದಾಲತ್ 19ರಂದು

    ಹಾವೇರಿ: ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಸೆ. 19ರಂದು ಮೆಗಾ ಇ-ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಈ ಅದಾಲತ್​ನಲ್ಲಿ ದೃಶ್ಯ ಸಂವಾದ ಮೂಲಕ ಇತ್ಯರ್ಥಕ್ಕೆ ಬಾಕಿಯಿರುವ, ಕಾನೂನು ಬದ್ಧವಾಗಿ ರಾಜಿ ಸಂಧಾನವಾಗಲು ಅವಕಾಶವಿರುವ ಎಲ್ಲ ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎಸ್.ಎಚ್. ರೇಣುಕಾದೇವಿ ತಿಳಿಸಿದ್ದಾರೆ.

    ಮೆಗಾ ಇ-ಲೋಕ ಅದಾಲತ್ ಕುರಿತು ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಮಾಲೋಚನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನ ಹಾಗೂ ಕೋವಿಡ್ ಹಿನ್ನೆಲೆಯಲ್ಲಿ ಎಸ್​ಒಪಿ ಅನುಸಾರ ಜಿಲ್ಲೆ ಮತ್ತು ತಾಲೂಕಿನ ಎಲ್ಲ ನ್ಯಾಯಾಲಯಗಳಲ್ಲಿ ಅದಾಲತ್ ಹಮ್ಮಿಕೊಳ್ಳಲಾಗುವುದು. ಪ್ರತಿ ಅದಾಲತ್​ಗೆ ಪ್ರತ್ಯೇಕವಾಗಿ ಒಬ್ಬರು ನ್ಯಾಯಾಧೀಶರು ಹಾಗೂ ನುರಿತ ವಕೀಲರು ಸಂಧಾನಕಾರರಾಗಿ ಕಾರ್ಯನಿರ್ವಹಿಸುತ್ತಾರೆ. ವ್ಯಾಜ್ಯಗಳು ನ್ಯಾಯಾಲಯದಲ್ಲಿ ವಿಚಾರಣೆಯಾಗಿ ಇತ್ಯರ್ಥವಾದಲ್ಲಿ ಅರ್ಜಿದಾರರ ಪರವಾಗಿ ಅಥವಾ ಎದುರುದಾರರ ಪರವಾಗಿ ಅಂದರೆ ಒಂದು ಕಡೆಯವರ ಪರವಾಗಿ ಮಾತ್ರ ಆದೇಶವಾಗುತ್ತದೆ. ಆದ್ದರಿಂದ ತಮ್ಮ ವಿರುದ್ಧದ ಆದೇಶದ ಮೇಲ್ಮನವಿಯನ್ನು ಸಲ್ಲಿಸಲು ಅವಕಾಶವಿರುತ್ತದೆ. ಆದರೆ, ಇ-ಲೋಕ ಅದಾಲತ್​ನಲ್ಲಿ ಇತ್ಯರ್ಥವಾದ ಪ್ರಕರಣಗಳಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಇಲ್ಲಿ ಎರಡೂ ಕಡೆಯ ಪಕ್ಷಗಾರರು ತಮ್ಮ ವ್ಯಾಜ್ಯಗಳಿಗೆ ಸೌಹಾರ್ದಯುತವಾಗಿ ಪರಿಹಾರವನ್ನು ಕಂಡುಕೊಳ್ಳುತ್ತಾರೆ. ಜತೆಗೆ ಅವರ ಅಮೂಲ್ಯವಾದ ಸಮಯ, ಶ್ರಮ ಮತ್ತು ಹಣದ ಉಳಿತಾಯವಾಗುತ್ತದೆ. ಇದಲ್ಲದೆ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ನ್ಯಾಯಾಲಯದ ಶುಲ್ಕವು ಸಹ ನಿಯಮಾನುಸಾರ ಮರುಪಾತಿಯಾಗುತ್ತದೆ. ಈ ಎಲ್ಲ ಕಾರಣಗಳಿಗಾಗಿ ಮೆಗಾ ಇ-ಲೋಕ ಅದಾಲತ್​ನ ಸದುಪಯೋಗವನ್ನು ಪಕ್ಷಗಾರರು ಪಡೆದುಕೊಳ್ಳಬೇಕು ಎಂದರು.

    ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿಗಳಿಗೆ ಆನ್​ಲೈನ್, ವಿಡಿಯೋ ಕಾನ್ಪರೆನ್ಸ್, ಇ-ಮೇಲ್, ಎಸ್.ಎಂ.ಎಸ್., ವಾಟ್ಸ್ ಆಪ್, ಎಲೆಕ್ಟ್ರಾನಿಕ್ ಮೋಡ್ ಮೂಲಕ ಮಾಹಿತಿ ಪಡೆದುಕೊಳ್ಳಬಹುದು. ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸಂಬಂಧಪಟ್ಟ ಉಚ್ಚ ನ್ಯಾಯಾಲಯ, ಕಾನೂನು ಸೇವಾ ಸಮಿತಿಯನ್ನು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕ ಕಾನೂನು ಸೇವಾ ಸಮಿತಿಗಳನ್ನು ಅಥವಾ ಕಾಯಂ ಜನತಾ ನ್ಯಾಯಾಲಯಗಳನ್ನು ಆನ್​ಲೈನ್ ಮೂಲಕ ಸಂರ್ಪಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.

    ಸಿಜೆಎಂ ಎ.ವಿ. ಪಾಟೀಲ, ಜಿಲ್ಲಾ ಹೆಚ್ಚುವರಿ ದಿವಾಣಿ ನ್ಯಾಯಾಧೀಶ ವಿ.ಆರ್. ಗುಡಿ, ಪ್ರಧಾನ ದಿವಾಣಿ ನ್ಯಾಯಾಧೀಶೆ ಲಕ್ಷ್ಮಿ ಎನ್ ಗರಗ, ಎಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್​ಪಿ ವಿಜಯಕುಮಾರ ಸಂತೋಷ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts