ಶಿಗ್ಗಾಂವಿ: ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿದ ಹಿನ್ನೆಲೆಯಲ್ಲಿ ಮನೆ ಮೇಲ್ಛಾವಣಿ ಕುಸಿದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ಗ್ರಾಮದ ಸುರೇಶ ದ್ಯಾಮಣ್ಣವರ ಅವರ ಮನೆ ಮೇಲ್ಛಾವಣಿ ಕುಸಿದಿದ್ದು, ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ನೀಲವ್ವ ಹುಣಸಿಕಟ್ಟಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಕಂದಾಯ ನಿರೀಕ್ಷಕ ಐ.ಎಂ. ಪಾಟೀಲ, ಪಿಡಿಒ ಬಸವರಾಜ ಗೊಂದಿ, ಗ್ರಾಮ ಲೆಕ್ಕಾಧಿಕಾರಿ ಡಿ.ಯು. ಸೊಂಟಕ್ಕಿ ಘಟನಾ ಸ್ಥಳ ಪರಿಶೀಲಿಸಿದ್ದಾರೆ.
ಕಳೆದ ಐದಾರು ದಿನಗಳಲ್ಲಿ ತಾಲೂಕಿನಾದ್ಯಂತ ಸತತ ಮಳೆಯಿಂದಾಗಿ ನಾಲ್ಕು ಮನೆಗಳು ಕುಸಿದಿವೆ. ಹಾನಿಗೊಳಗಾದ ಮನೆಗಳಿಗೆ ಸೂಕ್ತ ಪರಿಹಾರ ಒದಗಿಸಲು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ತಹಸೀಲ್ದಾರ್ ಪ್ರಕಾಶ ಕುದರಿ ತಿಳಿಸಿದ್ದಾರೆ.