ಮೈಸೂರು: ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಸಿಕೊಂಡು ಮೈಸೂರಿನಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಕೆಲಸವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನ ಅಂಗವಾಗಿ ನಗರದ ವಿದ್ಯಾರಣ್ಯಪುರಂನಲ್ಲಿ ಶನಿವಾರ ಆಯೋಜಿಸಿದ್ದ ಮೋದಿ ಯುಗ ಉತ್ಸವದಲ್ಲಿ ಮಾತನಾಡಿದರು.
ಪ್ಲಾಸ್ಟಿಕ್ ಬಳಸಿ ರಸ್ತೆ ನಿರ್ಮಾಣ ಕಾರ್ಯ ರಾಜ್ಯದಲ್ಲೇ ಮೊದಲ ಬಾರಿಗೆ ಮೈಸೂರಿನಲ್ಲಿ ಮಾಡಲಾಗುತ್ತಿದೆ. ಲೋಕೋಪಯೋಗಿ ಇಲಾಖೆಯಿಂದ ಅನುದಾನ ನೀಡಲಾಗಿದೆ. ವಿಜಯದಶಮಿ ದಿನದಂದು ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಿರ್ಮಿಸಿದ ರಸ್ತೆ ಹೆಚ್ಚು ದಿನ ಬಾಳಿಕೆ ಬರಲಿದೆ. ಗಟ್ಟಿತನ, ಗಡಸುತನದಿಂದ ಕೂಡಿರುವ ರಸ್ತೆ ಬೇಗ ಹಾಳಾಗುವುದಿಲ್ಲ. ವಿನೂತನ ತಂತ್ರಜ್ಞಾನ ಬಳಸಿ ಈ ಕೆಲಸ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ರಸ್ತೆ ಅಭಿವೃದ್ಧಿ, ರಸ್ತೆ ನಿರ್ಮಾಣಕ್ಕಾಗಿ ಲೋಕೋಪಯೋಗಿ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಮೈಸೂರು ಜಿಲ್ಲೆ 272 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. 16 ಸಾವಿರ ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಲಿ ಬಜೆಟ್ನಲ್ಲಿ ಪಿಡಬ್ಲುೃಡಿಗೆ ನೀಡಿದ್ದಾರೆ ಎಂದು ತಿಳಿಸಿದರು.