ಹೊಳೆಹೊನ್ನೂರು: ಈ ಹಿಂದೆ ಕೂಡ ಜಿಲ್ಲೆಯಿಂದ ಮೂರು ಜನ ಮುಖ್ಯಮಂತ್ರಿಯಾಗಿದ್ದರು. ಆದರೆ ಬಿ.ಎಸ್.ಯಡಿಯೂರಪ್ಪ ಅವರ ಅವಧಿಯಲ್ಲಿಯಲ್ಲಾದ ಅಭಿವೃದ್ಧಿ ಕಾರ್ಯಗಳಿಗೆ ಹೋಲಿಸಿದರೆ ತೀರಾ ಕಡಿಮೆ ಎಂದು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದರು.
ಸಮೀಪದ ಆನವೇರಿಯ ಸರ್ಕಾರಿ ಕಾಲೇಜು ಆವರಣದಲ್ಲಿ ಶುಕ್ರವಾರ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ ದಂಪತಿ ವಿವಾಹ ರಜತ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಮಹಿಳಾ ಸಮಾವೇಶ ಉದ್ಘಾಟಿಸಿ ಮಾನತಾಡಿ, ಕೆಲಸ ಮಾಡುವ ಇಚ್ಛಾಶಕ್ತಿ ಇದ್ದರೆ ಮಾತ್ರ ಕ್ಷೇತ್ರ ಅಭಿವೃದ್ಧಿ ಮಾಡಲು ಸಾಧ್ಯ. ಆದ್ದರಿಂದ ಯಾವುದೇ ವ್ಯಕ್ತಿ ಕೆಲಸ ಮಾಡುವ ಆಸಕ್ತಿ ಇದ್ದರೆ ಮಾತ್ರ ಅಭಿವೃದ್ಧಿ ಸಾಧ್ಯ ಎಂದರು.
ಜಿಲ್ಲೆಯಲ್ಲಿ ಈಗಾಗಲೇ ಸಾಕಷ್ಟು ಕಾಮಗಾರಿಗಳು ಜಾರಿಯಲಿವೆ. ಡಿಸೆಂಬರ್ ಹೊತ್ತಿಗೆ ವಿಮಾನ ನಿಲ್ದಾಣದ ಕಾಮಗಾರಿ ಪೂರ್ಣಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಅನೇಕ ಕೈಗಾರಿಕೆಗಳು ಸ್ಥಾಪನೆಗೆ ಅವಕಾಶ ನೀಡಿ ಯುವಕರಿಗೆ ಉದ್ಯೋಗ ದೊರಕುವ ಭರವಸೆ ಇದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಈ ಹಿಂದೆ ಕಾಣದಂತೆ ಅಭಿವೃದ್ಧಿಯನ್ನು ಹೊಂದಿದೆ. ಶಾಸಕರನ್ನು ಆಯ್ಕೆ ಮಾಡಿದ ಜನತೆ ಶಾಸಕರ ಕುಟುಂಬವಿದ್ದಂತೆ ಎಂದು ಅವರ ಮಧ್ಯೆಯೆ ಶಾಸಕರು ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದರು.
ಕೆ.ಬಿ.ಅಶೋಕ್ ನಾಯ್ಕ ಮಾತನಾಡಿ, ಗ್ರಾಮಾಂತರ ಕ್ಷೇತ್ರ ಅಭಿವೃದ್ಧಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ರಾಘವೇಂದ್ರ ಅವರ ಸಹಕಾರ ಮರೆಯುವಂತಿಲ್ಲ. ಗ್ರಾಮಾಂತರದ ಏತ ನೀರಾವರಿ ಯೋಜನೆಯಲ್ಲಿ 173 ಕೆರೆಗಳಿಗೆ ನೀರು ತುಂಬಿಸಲು 315 ಕೋಟಿ ರೂ. ಖರ್ಚು ಮಾಡಲಾಗಿದೆ. ಈಗಾಗಲೇ 530 ಕೋಟಿ ರೂ. ಯೋಜನೆಯ ಶಿವಮೊಗ್ಗ ಹಾಗೂ ಚಿತ್ರದುರ್ಗ ರಸ್ತೆ ಕಾಮಗಾರಿಯೂ ಶರವೇಗದಲ್ಲಿ ನಡೆಯುತ್ತಿದೆ. 65 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನ ಹಾಗೂ ಸಮುದಾಯ ಭವನಗಳಿಗೆ ನೀಡಲಾಗಿದೆ ಎಂದು ಹೇಳಿದರು.