More

    ಯೋಜನೆ ಅನುಷ್ಠಾನಕ್ಕೆ ನಿರ್ಲಕ್ಷಿಸಿದರೆ ದಂಡ

    ಶಿವಮೊಗ್ಗ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎಸ್ಸಿ, ಎಸ್ಟಿ, ಅಂಗವಿಕಲ ಹಾಗೂ ಬಡವರಿಗೆ ರೂಪಿಸಿರುವ ಯೋಜನೆಗಳು ಹಾಗೂ ವೈಯಕ್ತಿಕ ಫಲಾನುಭವಿಗಳಿಗೆ ರೂಪಿಸಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷಿಸುವ ಅಧಿಕಾರಿಗಳ ನಡೆ ಪ್ರಶ್ನಾರ್ಹ ಹಾಗೂ ದಂಡನಾರ್ಹವೂ ಆಗಿದೆ ಎಂದು ನಗರ ಯೋಜನಾ ನಿರ್ದೇಶಕ ಡಾ. ನಾಗೇಂದ್ರ ಎಫ್ ಹೊನ್ನಳ್ಳಿ ಎಚ್ಚರಿಕೆ ನೀಡಿದರು.

    ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಯೋಜನೆಗಳ ಸಕಾಲಿಕ ಅನುಷ್ಠಾನಕ್ಕೆ ಸಂಬಂಧಿತ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಕೂಡಲೇ ಗಮನಹರಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

    ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳನ್ನು ಕ್ಷಮಿಸುವುದಿಲ್ಲ. ಈ ಕುರಿತು ಈಗಾಗಲೇ ಸಂಬಂಧಿತರಿಗೆ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್​ಗಳಿಗೆ ಉತ್ತರಿಸುವುದರ ಜತೆಗೆ ತಮ್ಮ ಜವಾಬ್ದಾರಿ ಅರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

    ಈಗಾಗಲೇ ಸಂಸ್ಥೆಗಳಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ, ಪೂರ್ಣಗೊಂಡ ಕಾಮಗಾರಿಗಳು, ಹಣಕಾಸು ಸ್ಥಿತಿಗತಿ ಮುಂತಾದವುಗಳ ಮಾಹಿತಿ ಜಾಲತಾಣದಲ್ಲಿ ಉನ್ನತೀಕರಿಸಬೇಕಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್​ಪಿಎಸ್ ನೌಕರರ ವೇತನದ ವಂತಿಗೆ ಹಣ ಕಟಾವಣೆ ಆಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗುತ್ತಿಲ್ಲ. ಒಂದು ವೇಳೆ ಅಂತಹ ನೌಕರರು ಆಕಸ್ಮಿಕ ಅವಘಡಗಳಿಗೆ ತುತ್ತಾದಲ್ಲಿ ಎದುರಾಗುವ ಸಮಸ್ಯೆಗಳಿಗೆ ಅಧಿಕಾರಿಗಳೇ ಹೊಣೆ ಎಂದು ಎಚ್ಚರಿಸಿದರು.

    ಘನತ್ಯಾಜ್ಯ ವಿಲೇವಾರಿ ತೃಪ್ತಿದಾಯಕವಾಗಿಲ್ಲ: ಜಿಲ್ಲೆಯಲ್ಲಿ ಕೆಲವು ಘಟಕಗಳನ್ನು ಹೊರತುಪಡಿಸಿದರೆ ಘನತ್ಯಾಜ್ಯ ವಿಲೇವಾರಿ ಘಟಕಗಳ ನಿರ್ವಹಣೆ ತೃಪ್ತಿದಾಯಕವಾಗಿಲ್ಲ. ಎಲ್ಲ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅವುಗಳ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು. ಸಂಗ್ರಹಿಸಿದ ತ್ಯಾಜ್ಯವನ್ನು ಬೇರ್ಪಡಿಸಿ ವಿಲೇವಾರಿ ಮಾಡುವಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಪ್ರತಿನಿತ್ಯದ ಕಾರ್ಯನಿರ್ವಹಣೆಗೆ ಅಗತ್ಯವಾಗಿರುವ ಪರಿಕರ ಖರೀದಿಸಿ ಬಳಸುವಂತೆ ತಿಳಿಸಿದರು.

    ಕೆಲವು ಸ್ಥಳೀಯ ಸಂಸ್ಥೆಗಳಲ್ಲಿ ಈ ಹಿಂದಿನ ಹಣಕಾಸು ಯೋಜನೆಯಡಿ ಬಿಡುಗಡೆಯಾದ ಅನುದಾನ ಹಲವು ವರ್ಷಗಳಿಂದ ಬಳಕೆಯಾಗದೆ ಹಾಗೇಯೇ ಉಳಿಸಿಕೊಂಡಿರುವ ಬಗ್ಗೆ ಮಾಹಿತಿ ಇದೆ. ಅಂತಹ ಅಧಿಕಾರಿಗಳು ಉಳಿಸಿಕೊಂಡಿರುವ ಹಣವನ್ನು ನಿಗದಿಪಡಿಸಿದ ಉದ್ದೇಶಕ್ಕಾಗಿಯೇ ವಿನಿಯೋಗಿಸಿ ವರದಿ ನೀಡಬೇಕು. ತಪ್ಪಿದಲ್ಲಿ ನಿಯಮಾನುಸಾರ ಅಂತಹ ಅಧಿಕಾರಿಗಳನ್ನು ದಂಡನೆಗೆ ಗುರಿಪಡಿಸಲಾಗುವುದು ಎಂದರು.

    ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚರಂಡಿ ಸ್ವಚ್ಛಗೊಳಿಸುವುದನ್ನು ನಿರಂತರವಾಗಿಸಬೇಕು. ಮಳೆಗಾಲ ಆಗಿದ್ದರಿಂದ ಚರಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಇದರೊಂದಿಗೆ ಪೌರಕಾರ್ವಿುಕರು ತಮ್ಮ ಆರೋಗ್ಯವನ್ನು ನೋಡಿಕೊಳ್ಳಬೇಕೆಂದರು.

    ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಮಂಜುನಾಥ್, ಮೋಹನ್​ಕುಮಾರ್ ಸೇರಿ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts