ಬೀದರ್: ರಕ್ತದಾನದಿಂದ ಆರೋಗ್ಯಕ್ಕೆ ಲಾಭ ಇದೆಯೇ ಹೊರತು ಯಾವುದೇ ಹಾನಿ ಇಲ್ಲ ಎಂದು ಅಂಚೆ ನೌಕರರ ರಾಷ್ಟ್ರೀಯ ಒಕ್ಕೂಟದ ಮಹಿಳಾ ಸಮಿತಿ ಅಧ್ಯಕ್ಷೆ ಮಂಗಲಾ ಭಾಗವತ್ ನುಡಿದರು.
ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ ಹಾಗೂ ಶರಣ ತತ್ವ ಪ್ರಸಾರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ನಗರದ ನೌಬಾದ್ನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ರಕ್ತದಾನ ಮಾಡಿ ಉದ್ಘಾಟಿಸಿ ಅವರು ಮಾತನಾಡಿದರು.
ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮ ಆಗುವುದಿಲ್ಲ. ದೇಹದಲ್ಲಿ ಹೊಸ ರಕ್ತ ಉತ್ಪತ್ತಿ ಆಗುತ್ತದೆ. ಈವರೆಗೆ 36 ಬಾರಿ ರಕ್ತದಾನ ಮಾಡಿದ್ದೇನೆ ಎಂದು ತಿಳಿಸಿದರು.
ರಕ್ತದಾನ ಶ್ರೇಷ್ಠ ದಾನವಾಗಿದೆ. ಹೀಗಾಗಿ ಯುವಜನರು ರಕ್ತದಾನಕ್ಕೆ ಮುಂದೆ ಬರಬೇಕು ಎಂದು ಹೇಳಿದರು.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರೇಮಸಾಗರ್ ದಾಂಡೇಕರ್ ಮಾತನಾಡಿ, ರಕ್ತದಾನವು ಜೀವ ಉಳಿಸಲು ನೆರವಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ಶರಣಯ್ಯ ಸ್ವಾಮಿ ಮಾತನಾಡಿದರು. ವಸತಿ ನಿಲಯದ ಮೇಲ್ವಿಚಾರಕ ಗೌತಮ, ಜಿಲ್ಲಾ ರಕ್ತನಿಧಿ ಕೇಂದ್ರದ ಡಾ. ಸತೀಶ್, ಪ್ರಮುಖರಾದ ಬಸವರಾಜ ಸಿ, ಪ್ರದೀಪ್ ನಾಟೇಕರ್ ಇದ್ದರು. ಶರಣ ತತ್ವ ಪ್ರಸಾರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶಿವಕುಮಾರ ಬಿ. ನಿರೂಪಿಸಿದರು. ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಮೇಲ್ವಿಚಾರಕ ಸೂರ್ಯಕಾಂತ ವಂದಿಸಿದರು.