ಪಾಂಡವಪುರ: ರೈತರ ಧ್ವನಿಯಾಗಿ ಕಳೆದ ನಾಲ್ಕು ದಶಕಗಳಿಂದ ಹೋರಾಟ ನಡೆಸುತ್ತಿರುವ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಇಳಿವಯಸ್ಸಿನಲ್ಲೂ ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪರ ಪಟ್ಟಣ ಹಳೇ ಬಸ್ ನಿಲ್ದಾಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯಡಿಯೂರಪ್ಪ ಅವರಿಗೆ ಶಿಕಾರಿಪುರ ರಾಜಕೀಯ ಶಕ್ತಿ ನೀಡಿದೆ. ಮಂಡ್ಯ ಜಿಲ್ಲೆ ಅವರ ಕರ್ಮ ಭೂಮಿಯಾಗಿದೆ. ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ಪರವಾಗಿ ಯಾವ ರೀತಿ ವಾತಾವರಣ ಇತ್ತೋ ಅದೇ ರೀತಿಯ ವಾತಾವರಣ ಇಡೀ ಜಿಲ್ಲೆಯಲ್ಲಿ ಕಾಣುತ್ತಿದ್ದು, ಇದು ಬಿಜೆಪಿ ಅಭ್ಯರ್ಥಿಗಳಿಗೆ ಗೆಲುವು ತಂದು ಕೊಡಲಿದೆ. ಈ ನಿಟ್ಟಿನಲ್ಲಿ ನಮ್ಮ ಕಾರ್ಯಕರ್ತರು ಶಕ್ತಿಮೀರಿ ಹೋರಾಟ ಮಾಡುತ್ತಿದ್ದಾರೆ ಎಂದರು.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಇದೆ. ರಾಜ್ಯದಲ್ಲೂ ಬಿಜೆಪಿ ಸರ್ಕಾರ ಇರಬೇಕು ಎಂಬುದು ಮತದಾರರ ಅಭಿಲಾಷೆಯಾಗಿದ್ದು, ರಾಜ್ಯದ ಜನತೆ ಮತ್ತೊಮ್ಮೆ ಬಿಜೆಪಿಗೆ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿದೆ. ಪ್ರತಿಯೊಬ್ಬ ಕಾರ್ಯಕರ್ತರು ಡಬಲ್ ಇಂಜಿನ್ ಸರ್ಕಾರದ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಮೂಲಕ ಪಕ್ಷವನ್ನು ಅಧಿಕಾರ್ಕಕೆ ತರಬೇಕು ಎಂದು ಕರೆ ಕೊಟ್ಟರು.
ಕಾಂಗ್ರೆಸ್ ವಿರುದ್ಧ ಕಿಡಿ : ಮೇ 13ನೇ ರಂದು ಯಾರ ಡ್ಯಾಂ ಒಡೆದು ಹೋಗುತ್ತದೆ ಎಂಬುದು ಗೊತ್ತಾಗುತ್ತದೆ. 1989 ರಲ್ಲಿ ವೀರೇಂದ್ರ ಪಾಟೀಲ್ ನೇತೃತ್ವದಲ್ಲಿ 178 ಸ್ಥಾನ ಗೆದ್ದಿದ್ದರೂ ನಂತರದಲ್ಲಿ ಕಾಂಗ್ರೆಸ್ ಅವರನ್ನು ಯಾವ ರೀತಿ ನಡೆಸಿಕೊಂಡಿತ್ತು ಎಂಬುದು ರಾಜ್ಯದ ಜನತೆಗೆ ತಿಳಿದಿದೆ. ಇವತ್ತು ಕಾಂಗ್ರೆಸ್ಸಿಗರು ವೀರಶೈವ ಲಿಂಗಾಯತರ ಬಗ್ಗೆ ಅನುಕಂಪದಿಂದ ಮಾತನಾಡುತ್ತಿದ್ದಾರೆ. ವೀರಶೈವ ಲಿಂಗಾಯತರ ಜತೆಗೆ ರಾಜ್ಯದ ಎಲ್ಲ ಸಮುದಾಯಗಳು ಬಿಜೆಪಿ ಜತೆಗಿದೆ. ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬರುತ್ತೇವೆ ಎಂದು ಹಗಲುಗನಸು ಕಾಣುತ್ತಿದ್ದಾರೆ. ಚುನಾವಣೆ ಫಲಿತಾಂಶ ಬಂದಾಗ ಯಾರ ಪಟಾಕಿ ಠುಸ್ ಆಗುತ್ತೆ ಅಂತಾ ನೋಡುತ್ತೀರಿ, ಅಲ್ಲಿಯವರೆಗೆ ಕಾಯಬೇಕು ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು.
ಕಾರ್ಯಕ್ರಮಕ್ಕು ಮುನ್ನ ಬೈಕ್ ರ್ಯಾಲಿ ನಡೆಯಿತು ಬಿಜೆಪಿ ಅಭ್ಯರ್ಥಿ ಡಾ.ಎನ್.ಎಸ್.ಇಂದ್ರೇಶ್, ಮೈಲ್ಯಾಕ್ ಅಧ್ಯಕ್ಷ ರಘು ಕೌಟಿಲ್ಯ, ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಮೈಶುಗರ್ ಮಾಜಿ ಅಧ್ಯಕ್ಷ ಜೆ.ಶಿವಲಿಂಗೇಗೌಡ, ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ನಿರಂಜನ್ ಬಾಬು, ಮುಖಂಡರಾದ ಎಚ್.ಎನ್.ಮಂಜುನಾಥ್, ಕೆ.ಎಲ್.ಆನಂದ್, ವದೇಸಮುದ್ರ ಸೋಮಶೇಖರ್, ಎಸ್.ಮಂಜುನಾಥ್ ಇತರರು ಇದ್ದರು.