More

    ರೇವಣ್ಣ, ಪ್ರಜ್ವಲ್ ಬಂಧಿಸಿ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದಿಂದ ಪ್ರತಿಭಟನೆ

    ಹಾಸನ: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ. ರೇವಣ್ಣ ಅವರನ್ನು ಬಂಧಿಸಿ ಸೂಕ್ತ ತನಿಖೆ ನಡೆಸಿ, ಶಿಕ್ಷೆಗೊಳಪಡಿಸಬೇಕು. ಹಾಗೂ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ನಂತರ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಸಾವಿರಾರು ಪ್ರತಿಭಟನಾಗಾರರು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
    ಈ ವೇಳೆ ಮಹಿಳಾ ಹೋರಾಟಗಾರ್ತಿ ಕೆ.ಎಸ್. ವಿಮಲಾ ಮಾತನಾಡಿ, ಕೆಲ ದಿನಗಳಿಂದ ಹಾಸನದಲ್ಲಿ ಪೆನ್ ಡ್ರೈವ್ ಮುಖಾಂತರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಹಂಚಲಾಗುತ್ತಿದೆ. ಆ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ವಾಟ್ಸ್‌ಆಪ್‌ಗಳಲ್ಲಿ ಹರಿದಾಡುತ್ತಿವೆ. ಈ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೊಳಗಾಗುತ್ತಿದ್ದು, ಎಲ್ಲೆಡೆ ಈ ಕೃತ್ಯದ ಕುರಿತು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರತಿ ದಿನ ಹೊಸಹೊಸ ಚಿತ್ರಗಳು ಮತ್ತು ದೃಶ್ಯಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಚಿತ್ರಗಳು ಮತ್ತು ದೃಶ್ಯಗಳಲ್ಲಿರುವ ಮಹಿಳೆಯರ ಖಾಸಗಿ ಮತ್ತು ಕೌಟುಂಬಿಕ ಬದುಕು ಛಿದ್ರವಾಗಿದೆ. ಕೆಲವರು ಆತ್ಮಹತ್ಯೆಗೂ ಪ್ರಯತ್ನಿಸಿರುವ ವರದಿಗಳಿವೆ. ಯಾವ ಕ್ಷಣದಲ್ಲಿ ಯಾವಾಗ ಮತ್ತೊಂದು ಪೆನ್‌ಡ್ರೈವ್ ಹೊರ ಬರುತ್ತದೆಯೋ, ಅದರಲ್ಲಿ ಯಾವ ಮಹಿಳೆಯ ಖಾಸಗಿ ಚಿತ್ರಗಳು ಮತ್ತು ದೃಶ್ಯಗಳು ಬಿತ್ತರಗೊಳ್ಳಲಿವೆಯೋ ಎಂಬ ಆತಂಕದಿಂದ ಸಂತ್ರಸ್ತೆಯರು ಬದುಕುತ್ತಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿರುವ ಪ್ರಜ್ವಲ್ ರೇವಣ್ಣ ಮತ್ತು ಹೊಳೆನರಸೀಪುರದಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್.ಡಿ.ರೇವಣ್ಣ ಇವರನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದರು.
    ಸಾರ್ವಜನಿಕವಾಗಿ ಇಷ್ಟೆಲ್ಲಾ ಅನಾಹುತ ನಡೆದು ಆತಂಕ ಹರಡಿರುವಾಗ ಈ ಕುರಿತು ತಡವಾಗಿಯಾದರೂ ಎಚ್ಚೆತ್ತುಕೊಂಡು ಇಡೀ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಒಕ್ಕೂಟ ಸ್ವಾಗತಿಸುತ್ತದೆ. ಮತ್ತು ಯಾವುದೇ ಒತ್ತಡಗಳಿಗೆ ಮಣಿಯದೆ, ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ರಕ್ಷಣೆ ಮತ್ತು ನ್ಯಾಯವನ್ನು ಒದಗಿಸಿಕೊಡಬೇಕೆಂದು ಮನವಿ ಮಾಡಿಕೊಳ್ಳುತ್ತೇವೆ. ಯಾವುದೇ ವ್ಯಕ್ತಿಯ ಖಾಸಗಿ ಬದುಕಿನ ವಿಚಾರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವುದು ಅಪರಾದವಾಗುತ್ತದೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಲಾಭವನ್ನಷ್ಟೇ ಗುರಿಯಾಗಿಸಿಕೊಂಡು ಮಹಿಳೆಯರ ಖಾಸಗಿ ಬದುಕಿನ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಸಾರ್ವಜನಿಕವಾಗಿ ಬಿತ್ತರಿಸುವುದು ಅತ್ಯಂತ ಹೀನ ಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಮನೆ ಕೆಲಸದ ಹೆಂಗಸಿನ ಜತೆಗೂ ಬಲವಂತವಾಗಿ ಅತ್ಯಾಚಾರ ನಡೆಸಿ ಆ ದೃಶ್ಯಗಳನ್ನೂ ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಳ್ಳಲಾಗಿದೆ. ಇಂತಹ ವಿಕೃತ ಮತ್ತು ವಿಕ್ಷಿಪ್ತ ಮನಸ್ಸಿನ ವ್ಯಕ್ತಿ ಜನಪ್ರತಿನಿಧಿಯಾಗಿ ಇರುವುದಿರಲಿ ನಾಗರಿಕ ಸಮಾಜದಲ್ಲಿ ಮುಕ್ತವಾಗಿ ಓಡಾಡಿಕೊಂಡಿರುವುದು ಬಹಳ ಅಪಾಯಕಾರಿ ಮತ್ತು ಆತಂಕಕಾರಿ ಸಂಗತಿಯಾಗಿದೆ. ಈತನ ಈ ಕುಕೃತ್ಯದಿಂದಾಗಿ ಹಲವಾರು ಮಹಿಳೆಯರ ಬದುಕು ಛಿದ್ರಗೊಳ್ಳುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
    ಈಗಾಗಲೇ ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಹೊಳೆನರಸಿಪುರದ ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ಎಂಬುವವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ‘ನನ್ನ ಬಳಿ 2 ಸಾವಿರಕ್ಕೂ ಹೆಚ್ಚು ಪೋಟೋ, ವೀಡಿಯೋಗಳಿವೆ. ಈ ಕುರಿತು ಬಿಜೆಪಿ ಹೈಕಮಾಂಡ್‌ಗೆ ಮಾಹಿತಿ ನೀಡಲಾಗಿದೆ,’ ಎಂದು ಹೇಳಿಕೆ ನೀಡಿದ್ದಾರೆ. ಪೊಲೀಸರು ಕೂಡಲೇ ಅವರನ್ನು ವಿಚಾರಣೆಗೆ ಒಳಪಡಿಸಿದಲ್ಲಿ ಆ ವೀಡಿಯೋಗಳನ್ನು ಚಿತ್ರೀಕರಿಸಿರುವ ವ್ಯಕ್ತಿ ಯಾರು? ದೇವರಾಜೇಗೌಡರಿಗೆ ಆ ವೀಡಿಯೋಗಳನ್ನು ನೀಡಿರುವ ವ್ಯಕ್ತಿ ಯಾರು? ಯಾರ್ಯಾರಿಗೆ ಈ ವೀಡಿಯೋಗಳನ್ನು ನೀಡಿದ್ದಾನೆ? ಯಾರು ಈ ವೀಡಿಯೋಗಳನ್ನು ಪೆನ್‌ಡ್ರೈವ್ ಮುಖಾಂತರ ಸಾರ್ವಜನಿಕರಿಗೆ ಹಂಚುತ್ತಿದ್ದಾರೆ? ಎನ್ನುವ ಸತ್ಯಾಂಶ ಹೊರಬರಲಿದೆ. ಇಡೀ ಪ್ರಕರಣದ ತನಿಖೆಯಲ್ಲಿ ಹಾಗೂ ಆರೋಪಿಗಳನ್ನು ಬಂಧಿಸುವ ಯಾವುದೇ ರಾಜಕೀಯ ಪ್ರಭಾವ ಹಾಗೂ ಒತ್ತಡಕ್ಕೆ ಒಳಗಾಗದಂತೆ ಎಸ್‌ಐಟಿ ಕೆಲಸ ಮಾಡುವುದನ್ನು ರಾಜ್ಯ ಸರ್ಕಾರ ಖಾತ್ರಿಪಡಿಸಬೇಕು ಎಂದು ಆಗ್ರಹಿಸಿದರು.
    ಲೈಂಗಿಕ ದೌರ್ಜನ್ಯದಲ್ಲಿ ಸಂತ್ರಸ್ತರಾಗಿರುವ ಮಹಿಳೆಯರ ಗೌಪ್ಯತೆಯನ್ನು ಕಾಪಾಡಬೇಕು. ಮತ್ತು ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಸಂತ್ರಸ್ತ ಮಹಿಳೆಯರಿಗಾಗಿ ಪ್ರತ್ಯೇಕ ಕೌನ್ಸೆಲಿಂಗ್ ಕೇಂದ್ರಗಳನ್ನು ತೆರೆಯಬೇಕು. ಹಾಗೂ ಸಂತ್ರಸ್ತ ಮಹಿಳೆಯರಿಗೆ ದೂರು ದಾಖಲಿಸಲು ಸಾಧ್ಯವಾಗುವಂತೆ ಹಾಸನದಲ್ಲಿ ಹಾಗೂ ಬೆಂಗಳೂರಿನಲ್ಲಿ ಪ್ರತ್ಯೇಕವಾದ ದೂರು ಕೇಂದ್ರಗಳನ್ನು ಸ್ಥಾಪಿಸಬೇಕು. ಜೊತೆಗೆ ದೂರು ದಾಖಲಿಸಲು ಬರುವ ಮಹಿಳೆಯರಿಗೆ ಸೂಕ್ತ ಭದ್ರತೆ ಮತ್ತು ಪ್ರಯಾಣ ವ್ಯವಸ್ಥೆ ಒದಗಿಸಬೇಕು ಎಂದು ಆಗ್ರಹಿಸಿದರು.
    ಪ್ರತಿಭಟನೆಯಲ್ಲಿ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದ ಪದಾಧಿಕಾರಿಗಳಾದ ದೇವಿ, ಗೌರಮ್ಮ, ಶೋಭಾ, ಸವಿತಾ, ಸುಶೀಲಾ, ಸಬಿಹಾ, ಭೂಮಿಗೌಡ, ಸುಶೀಲಾ, ಸಾಹಿತಿ ರೂಪಾ ಹಾಸನ, ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಮಮತಾ ಶಿವು, ಸೌಮ್ಯಾ, ಅರವಿಂದ, ದಸಂಸ ಸಂದೇಶ್, ವಿಜಯ್ ಕುಮಾರ್, ಮುಬಶೀರ್ ಅಹಮದ್, ಸಿಐಟಿಯು ಪುಷ್ಪಾ, ಜಯಂತಿ, ಸಾಹಿತಿ ಸುವರ್ಣಾ, ಕಲಾವಿದ ಶಿವಪ್ರಸಾದ್, ಡಿವೈಎಫ್‌ಐ ಪೃಥ್ವಿ, ಎಚ್.ಆರ್. ನವೀನ್ ಕುಮಾರ್, ಕೆಪಿಆರ್‌ಎಸ್ ಜಿಲ್ಲಾಧ್ಯಕ್ಷ, ಅಬ್ದುಲ್ ಸಮದ್, ದಸಂಸ ಎಸ್.ಎನ್.ಮಲ್ಲಪ್ಪ, ಕೃಷ್ಣದಾಸ್, ಎಂ.ಸಿ. ಡೋಂಗ್ರೆ, ಧರ್ಮರಾಜ್ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts