More

    ರೈಲು, ಬಸ್ ನಿಲ್ದಾಣಗಳಲ್ಲೂ ತಪಾಸಣೆಗೆ ಸೂಚನೆ

    ಮೈಸೂರು: ಬಸ್, ರೈಲ್ವೆ ನಿಲ್ದಾಣಗಳಲ್ಲಿ ತಪಾಸಣಾ ಕೇಂದ್ರ ಸ್ಥಾಪಿಸಿ ಅನುಮಾನಾಸ್ಪದ ಚಟುವಟಿಕೆಗಳು, ವ್ಯಕ್ತಿಗಳನ್ನು ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚಿಸಿದರು.

    ಚುನಾವಣಾ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿ, ಬಸ್‌ಗಳ ಮೇಲೆ ಇರುವ ಸರ್ಕಾರದ ಯೋಜನೆಗಳ ಜಾಹೀರಾತುಗಳನ್ನು ಕೂಡಲೇ ತೆರವುಗೊಳಿಸಬೇಕು. ನಗರದ ಬಸ್ ನಿಲ್ದಾಣ, ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಚೆಕ್‌ಪೋಸ್ಟ್ ತೆರೆದು ಪರಿಶೀಲನೆ ನಡೆಸಬೇಕು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ನಿರ್ದೇಶಿಸಿದರು.

    ಮಾರ್ಗಮಧ್ಯೆ ಆಯ್ದ ಹೋಗುವ ಚೆಕ್‌ಪೋಸ್ಟ್‌ಗಳಲ್ಲಿ ಬಸ್‌ಗಳನ್ನು ಪರಿಶೀಲನೆ ಮಾಡಲಾಗುವುದು. ಈ ಕುರಿತು ಕೆಎಸ್‌ಆರ್‌ಟಿಸಿ ಚಾಲಕರು ಹಾಗೂ ನಿರ್ವಾಹಕರಿಗೆ ಮನವರಿಕೆ ಮಾಡಬೇಕು ಎಂದು ಹೇಳಿದರು.

    ಜಿಲ್ಲಾ ವ್ಯಾಪ್ತಿಯ 14 ರೈಲ್ವೆ ನಿಲ್ದಾಣಗಳಲ್ಲಿ ರೈಲು ಬರುವ ಸಮಯದ ಆಧಾರದ ಮೇಲೆ ಸ್ಟೇಷನ್ ಅಧಿಕಾರಿಗಳು ಕಣ್ಗಾವಲು ವಹಿಸಬೇಕು. ಸರದಿ ಪಾಳಿ ಪ್ರಕಾರ ಚೆಕ್‌ಪೋಸ್ಟ್‌ಗಳಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸಬೇಕು ಎಂದರು.

    ಮೈಸೂರು ವಿಮಾನ ನಿಲ್ದಾಣದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ಹೆಲಿಕಾಪ್ಟರ್, ವಿಮಾನಗಳಲ್ಲಿ ಆಗಮಿಸುವ ಪ್ರವಾಸಿಗರನ್ನು ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.

    ಚುನಾವಣಾ ಪ್ರಕ್ರಿಯೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರಣಕ್ಕೆ ಮತದಾನದಿಂದ ಹೊರಗುಳಿಯುವಂತಿಲ್ಲ. ತಪ್ಪದೇ ಎಲ್ಲ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರು ಮತದಾನದಲ್ಲಿ ಭಾಗವಹಿಸಬೇಕು. ನೂರಕ್ಕೆ ನೂರರಷ್ಟು ಮತದಾನವಾಗುವಂತೆ ಕ್ರಮ ವಹಿಸಬೇಕು ಎಂದರು.

    ಪಾಲಿಕೆಯ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯತ್ರಿ, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಮ್, ಉಪವಿಭಾಗಾಧಿಕಾರಿಗಳಾದ ಕಮಲಾ ಬಾಯಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts