ಹುಬ್ಬಳ್ಳಿ: ಜಿಲ್ಲೆಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಾಟ್ಸ್ ಆಪ್ ಮೂಲಕ ಸಾರ್ವಜನಿಕರ ಅರ್ಜಿ, ದೂರು ಸ್ವೀಕರಿಸಿ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹುಬ್ಬಳ್ಳಿ ತಾಲೂಕಾಡಳಿತಕ್ಕೆ ಸೂಚಿಸಿದ್ದಾರೆ. ಇಲ್ಲಿನ ಮಿನಿ ವಿಧಾನಸೌಧಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಅವರು ಅಧಿಕಾರಿಗಳೊಂದಿಗೆ ರ್ಚಚಿಸಿದರು. ಪ್ರತ್ಯೇಕ ವಾಟ್ಸ್ ಆಪ್ ಸಂಖ್ಯೆಗಳನ್ನು ಬಿಡುಗಡೆ ಮಾಡಿ. ಆ ಮೂಲಕ ಸಾರ್ವಜನಿಕರ ಅರ್ಜಿ ಹಾಗೂ ದೂರು ಸ್ವೀಕರಿಸಿ ತಕ್ಷಣವೇ ಸ್ಪಂದಿಸಬೇಕು. ಸಾರ್ವಜನಿಕರು ಅನಗತ್ಯವಾಗಿ ಕಚೇರಿಗಳಿಗೆ ಆಗಮಿಸುವುದನ್ನು ತಪ್ಪಿಸಬೇಕು. ಮಿನಿ ವಿಧಾನಸೌಧಕ್ಕೆ ಆಗಮಿಸುವ ಸಾರ್ವಜನಿಕರ ಸ್ಕ್ರೀನಿಂಗ್ ಕಟ್ಟುನಿಟ್ಟಾಗಿ ಮಾಡಬೇಕು. ಕರೊನಾ ಪ್ರಕರಣಗಳನ್ನು ನಿಯಂತ್ರಿಸುವ ಕುರಿತು ಪೊಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು. ಉಪವಿಭಾಗಾಧಿಕಾರಿ ಮಹಮ್ಮದ ಜುಬೇರ, ಹುಬ್ಬಳ್ಳಿ ಶಹರ ತಹಸೀಲ್ದಾರ್ ಶಶಿಧರ ಮಾಡ್ಯಾಳ, ಗ್ರಾಮೀಣ ತಹಸೀಲ್ದಾರ್ ಪ್ರಕಾಶ ನಾಶಿ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.