ಚಿತ್ರದುರ್ಗ: ಬೆಳಗಾವಿ ಅಧಿವೇಶನದೊಳಗೆ ಚಿತ್ರದುರ್ಗ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಸಂಬಂಧ ಸಂಪೂರ್ಣ ಅನುದಾನ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ಅದ್ದೂರಿ ದುರ್ಗೋತ್ಸವ ಆಚರಣೆ ನಡೆಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಿದರು.
ವೈದ್ಯಕೀಯ ಕಾಲೇಜು ನಿರ್ಮಾಣ ಸಂಬಂಧ ಈವರೆಗೂ ಭೂಮಿ ಪೂಜೆ ನೆರವೇರಿಲ್ಲ. 500 ಕೋಟಿ ರೂ. ಬಜೆಟ್ ಘೋಷಣೆ ಪೈಕಿ ಕೇವಲ 30 ಕೋಟಿ ರೂ. ಮಾತ್ರ ಬಿಡುಗಡೆಯಾಗಿದೆ. ಇನ್ನುಳಿದ ಅನುದಾನ ತ್ವರಿತವಾಗಿ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.
ಸೇವೆ ಕಾಯಂಗೆ ಸತತ ಹತ್ತು ದಿನಗಳಿಂದಲೂ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸಬೇಕು. ನಗರದಲ್ಲಿ ಅವೈಜ್ಞಾನಿಕ ರಸ್ತೆಗಳು ನಿರ್ಮಾಣವಾಗಿದ್ದು, ಎಲ್ಲಿಯೂ ಪಾದಚಾರಿಗಳ ಸಂಚಾರಕ್ಕೆ ಫುಟ್ಪಾತ್ಗಳಿಲ್ಲ. ಎಲ್ಲೆಂದರಲ್ಲಿ ರಾಜಕಾಲುವೆ ಒತ್ತುವರಿಯಾಗಿದ್ದು, ಕ್ರಮವಹಿಸಿಲ್ಲ. ಈ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಸಂಘಟನೆ ಅಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಅಧ್ಯಕ್ಷೆ ವೀಣಾ ಗೌರಣ್ಣ, ಪದಾಧಿಕಾರಿಗಳಾದ ಗೋಪಿನಾಥ್, ಜಗದೀಶ್, ರತ್ನಮ್ಮ, ಸುರೇಶ, ಅಖಿಲೇಶ್ ಇತರರಿದ್ದರು.