ರಿಪ್ಪನ್ಪೇಟೆ: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಮತ್ತು ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ಕೊಡಿಸಿ ಎಂದು ಮಲೆನಾಡು ರೈತ ಹೋರಾಟ ಸಮಿತಿಯಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಈಗಾಗಲೇ ಬಹಿರಂಗ ಪತ್ರ ಬರೆಯಲಾಗಿದೆ. ಫೆ.27ರಂದು ಪ್ರಧಾನಿ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಅಂದು ಮುಳಗಡೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡಬೇಕೆಂದು ರೈತ ಹೋರಾಟ ಸಮಿತಿಯ ಸಂಚಾಲಕ ತೀ.ನಾ.ಶ್ರೀನಿವಾಸ ಆಗ್ರಹಪಡಿಸಿದರು.
ಪಟ್ಟಣದಲ್ಲಿ ಗುರುವಾರ ಬಹಿರಂಗ ಕರಪತ್ರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶರಾವತಿ ಮುಳಗಡೆ ಸಂತ್ರಸ್ತರಿಗೆ ಈ ಹಿಂದಿನ ಸರ್ಕಾರ 9600 ಎಕೆರೆ ಭೂಮಿ ಹಕ್ಕುಪತ್ರ ನೀಡಿತ್ತು. ರಾಜ್ಯ ಹೈಕೋರ್ಟ್ 2021ರ ಮಾ.3ರಂದು ಕೇಂದ್ರದ ಅನುಮತಿ ಪಡೆಯದೆ ಡಿನೋಟಿಫಿಕೇಷನ್ ಮಾಡಿರುವ ಕಾರಣ ಆದೇಶ ರದ್ದು ಪಡಿಸಿತ್ತು. ಇದುವರೆಗೂ ಕರ್ನಾಟಕ ಸರ್ಕಾರ ಮೇಲ್ಮನವಿ ಸಲ್ಲಿಸಿಲ್ಲ ಎಂದು ದೂರಿದರು.
ಶಿವಮೊಗ್ಗ ಜಿಲ್ಲೆಯ ಮಾಜಿ ಮುಖ್ಯಮಂತ್ರಿಗಳಿಗೆ ಶಾಸಕರು, ಸಂಸದರು, ಮಂತ್ರಿಗಳಿಗೆ ನೂರಾರು ಬಾರಿ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಆದ ಕಾರಣ ಪ್ರಧಾನಿ ಶಿವಮೊಗ್ಗಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಸಂತ್ರಸ್ತರೆಲ್ಲರಿಗೂ ಹಕ್ಕುಪತ್ರ ನೀಡಬೇಕೆಂದು ಒತ್ತಾಯಿಸಲು ಕರಪತ್ರಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.