ಹನಗೋಡು : ಮಕ್ಕಳ ಬಗ್ಗೆ ಪಾಲಕರಿಗೆ ಇರುವಷ್ಟೇ ಜವಾಬ್ದಾರಿ ಶಿಕ್ಷಕರ ಮೇಲೂ ಇದೆ ಎಂದು ಶಾಸಕ ಜಿ.ಡಿ.ಹರೀಶ್ಗೌಡ ಹೇಳಿದರು.
ಹನಗೋಡಿನ ಶ್ರೀ ಲಕ್ಷ್ಮಣತೀರ್ಥ ವಿದ್ಯಾಸಂಸ್ಥೆಯಲ್ಲಿ ಶನಿವಾರ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳು ಹೆಚ್ಚಿನ ಸಮಯ ಶಿಕ್ಷಕರೊಂದಿಗೆ ಶಾಲೆಯಲ್ಲಿ ಕಳೆಯುತ್ತಾರೆ. ಆದ್ದರಿಂದ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚು ಒತ್ತು ನೀಡಬೇಕು. ವಿದ್ಯಾರ್ಥಿಗಳು ಕೂಡ ಶಿಕ್ಷಣದ ಜತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆ ಅಧ್ಯಕ್ಷ ಹನಗೋಡು ನಟರಾಜ್ ಮಾತನಾಡಿ, ಖಾಸಗಿ ವಿದ್ಯಾಸಂಸ್ಥೆಗಳನ್ನು ಕಟ್ಟುವುದು ಸುಲಭದ ಮಾತಲ್ಲ. ಗುಣಾತ್ಮಕ ಶಿಕ್ಷಣ ನೀಡಿದಾಗ ಮಾತ್ರ ಶಿಕ್ಷಣ ಸಂಸ್ಥೆಗಳು ನಿಲ್ಲುತ್ತವೆ ಎಂದು ಅಭಿಪ್ರಾಯಪಟ್ಟರು.
2022-23 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ಶಾಲೆಯ ವಿದ್ಯಾರ್ಥಿನಿ ಎಚ್.ಎನ್.ಅನುಷಾ ಹಾಗೂ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಹನಗೋಡು ಗ್ರಾ.ಪಂ.ಅಧ್ಯಕ್ಷ ಚೆನ್ನಯ್ಯ, ಉಪಾಧ್ಯಕ್ಷೆ ಜಯಲಕ್ಷ್ಮಮ್ಮ, ಬಿಜೆಪಿ ಮಾಜಿ ಅಧ್ಯಕ್ಷ ಹನಗೋಡು ಮಂಜುನಾಥ್, ಎಪಿಎಂಸಿ ಮಾಜಿ ಅಧ್ಯಕ್ಷರಾದ ಕಿರಂಗೂರು ಬಸವರಾಜ್, ಮುದಗನೂರು ಸುಭಾಷ್, ಗ್ರಾಪಂ ಮಾಜಿ ಅಧ್ಯಕ್ಷ ದಾ.ರಾ.ಮಹೇಶ್ , ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ನರಸಿಂಹ, ಗೋವಿಂದಗೌಡ, ಟಿ.ರಂಗಸ್ವಾಮಿ, ಕೆ.ಡಿ. ಮಂಜುನಾಥ್, ಮುಖ್ಯಶಿಕ್ಷಕ ನಟರಾಜ್ ಮತ್ತಿತರರಿದ್ದರು.