ಚಿಕ್ಕಮಗಳೂರು: ಶಿಕ್ಷಣದಿಂದ ಅಸ್ಪಶ್ಯತೆ, ಜಾತೀಯತೆ ಹಾಗೂ ಮೌಢ್ಯ ನಿವಾರಣೆ ಸಾಧ್ಯ ಎಂದು ಸರ್ವ ಧರ್ಮ ಸೇವಾ ಸಂಸ್ಥೆ ಅಧ್ಯಕ್ಷ ಕೆ.ಭರತ್ ಅಭಿಪ್ರಾಯಪಟ್ಟರು.
ಹಳೇ ಉಪ್ಪಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಉಚಿತ ಪಠ್ಯ ಸಾಮಗ್ರಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾಭ್ಯಾಸಕ್ಕೆ ಹೆಚ್ಚು ಆಸಕ್ತಿ ನೀಡಿದರೆ ನೆಮ್ಮದಿಯ ಜೀವನ ರೂಪಿಸಿಕೊಳ್ಳಬಹುದು ಎಂದು ತಿಳಿಸಿದರು. ಮಕ್ಕಳು ಉನ್ನತ ಶಿಕ್ಷಣ ಪಡೆಯುವತ್ತ ಗಮನಹರಿಸಬೇಕು. ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ 16 ವರ್ಷಗಳಿಂದ ಪುಸ್ತಕ ಸೇರಿ ಕಲಿಕಾ ಸಾಮಗ್ರಿ ವಿತರಿಸಲಾಗುತ್ತಿದೆ. ಸಿಕ್ಕಿರುವ ಅವಕಾಶ ಬಳಸಿಕೊಂಡು ಮಾದರಿಯಾಗಿ ಬೆಳೆಯಬೇಕು ಎಂದು ಸಲಹೆ ನೀಡಿದರು.
ನಗರಸಭಾ ಸದಸ್ಯ ಮುನೀರ್ ಅಹ್ಮದ್ ಮಾತನಾಡಿ, ಶಾಲೆಗೆ ಮೂಲ ಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗುವುದು. ಕೊಠಡಿಗಳ ನಿರ್ಮಾಣ ಶೀಘ್ರ ಪೂರ್ಣಗೊಳಿಸಬೇಕು ಎಂದು ತಿಳಿಸಿದರು. ಮುಖ್ಯಶಿಕ್ಷಕ ಮಾನಪ್ಪ , ನಿವೃತ್ತ ಶಿಕ್ಷಕ ಗಿರೀಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ದೀಪಿಕಾ, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಬಾನಾ ಸುಲ್ತಾನ್, ಮುಖಂಡರಾದ ಕುಸುಮಾ ಭರತ್, ಜೀವನ್, ಮೌಸಿನಾ ಇತರರಿದ್ದರು.