ಚಿಕ್ಕೋಡಿ, ಬೆಳಗಾವಿ: ಶಿಕ್ಷಣ ಸಂಸ್ಥೆಗಳನ್ನು ವೇತನಾನುದಾನಕ್ಕೆ ಒಳಪಡಿಸುವಂತೆ ಹಾಗೂ ಅತಿವೃಷ್ಟಿಯಿಂದ ಹಾನಿಗೊಳಗಾದ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡುವಂತೆ ಕೋರಿ ವಿಪ ಸದಸ್ಯ ಪ್ರಕಾಶ ಹುಕ್ಕೇರಿ ಅವರು ಶಿಕ್ಷಣ ಸಚಿವ ಬಿ.ಸಿ ನಾಗೇಶ ಅವರಿಗೆ ಈಚೆಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು.
ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ನಿರಂತರ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದ ಶಾಸಕ ಪ್ರಕಾಶ ಹುಕ್ಕೇರಿ, ವೇತನಾನುದಾನಕ್ಕೆ ಒಳಪಡದ ಶಿಕ್ಷಣ ಸಂಸ್ಥೆಗಳನ್ನು ಆದಷ್ಟು ಬೇಗ ಅನುದಾನಕ್ಕೆ ಒಳಪಡಿಸಲು ಹೆಚ್ಚಿನ ಕಾಳಜಿ ವಹಿಸುವಂತೆ ಶಿಕ್ಷಣ ಸಚಿವರಿಗೆ ಮನವಿ ಮಾಡಿದರು.
ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆಯೂ ಚರ್ಚಿಸಿದ್ದೇನೆ, ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಶಾಲಾ ಕೊಠಡಿಗಳ ದುರಸ್ತಿ ಹಾಗೂ ನಿರ್ಮಾಣಕ್ಕಾಗಿ 2 ಕೋಟಿ ರೂ. ಗಿಂತಲೂ ಹೆಚ್ಚಿನ ಅನುದಾನ ನೀಡಲಾಗಿದೆ. ಸರ್ಕಾರಿ ಶಾಲಾ ಕೊಠಡಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾನಿ ಆಗಿರುವುದರಿಂದ ಇನ್ನಷ್ಟು ಅನುದಾನ ಮಂಜೂರು ಮಾಡಬೇಕೆಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಶಿಕ್ಷಣ ಸಚಿವರು, ಆದಷ್ಟು ಬೇಗ ಸೂಕ್ತ ಅನುದಾನ ಮಂಜೂರು ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ವೇತನಾನುದಾನಕ್ಕೆ ಒಳಪಡಿಸಬೇಕೆಂದಿರುವ ಶಾಲೆಗಳ ಸಾಧಕ-ಬಾಧಕಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸುವುದಾಗಿ ತಿಳಿಸಿದ್ದಾರೆಂದು ವಿಪ ಸದಸ್ಯ ಪ್ರಕಾಶ ಹುಕ್ಕೇರಿ ಮಾಹಿತಿ ನೀಡಿದರು.