More

    ಶೀತ ವಾತಾವರಣ ಬೆಳೆಗಳ ರಕ್ಷಣೆಗೆ ಕೃಷಿ ಇಲಾಖೆ ಸಲಹೆ 

    ದಾವಣಗೆರೆ: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಇದರಿಂದ ಕೆಲವೆಡೆ ಜಮೀನಿನಲ್ಲಿ ನೀರು ನಿಲ್ಲುವ ಕಾರಣಕ್ಕೆ ಬೆಳೆಗಳ ಮೇಲೆ ಶೀತದ ಅಡ್ಡ ಪರಿಣಾಮಗಳು ಕಂಡುಬರುತ್ತಿವೆ. ರೈತರು ಕೆಲವು ಕ್ರಮಗಳನ್ನು ಅನುಸರಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ ಚಿಂತಾಲ್ ತಿಳಿಸಿದ್ದಾರೆ.
    ಶೀತದ ಕಾರಣಕ್ಕೆ ಮೆಕ್ಕೆಜೋಳ ಬೆಳೆ ಬಿಳಿಚಾಗುವುದು, ಕ್ಯಾದಿಗೆ ರೋಗ ಲಕ್ಷಣಗಳು ಕಂಡುಬಂದಲ್ಲಿ ಜಮೀನಿನಲ್ಲಿ ನೀರು ಬಸಿದು ಹೋಗುವಂತೆ ನೀರಿನ ದಾರಿ ಕಲ್ಪಿಸುವುದು. ದಪ್ಪವಾಗಿ ಬಿತ್ತನೆಯಾದ ಕಡೆಗಳಲ್ಲಿ ಕನಿಷ್ಠ 8 ಅಂಗುಲ ಅಂತರ ಕಾಯ್ದುಕೊಳ್ಳಲು ಸಸಿಗಳನ್ನು ಕಿತ್ತು, ಎಡೆ ಹೊಡೆದು ಬೆಳೆ ಸಾಲುಗಳಿಗೆ ದಿಂಡು ಏರಿಸಬೇಕು.
    ಮೆಕ್ಕೆಜೋಳದ 30 ದಿವಸದ ಬೆಳೆಗೆ 10-15 ಕೆಜಿ ಯೂರಿಯಾ ಮೇಲುಗೊಬ್ಬರ ಕೊಡಬಹುದು. 3ಗ್ರಾಂ.ನೀರಿನಲ್ಲಿ ಕರಗುವ ಸಾರಜನಕ: ರಂಜಕ: ಪೊಟ್ಯಾಷ್ ಮತ್ತು 3 ಮಿ.ಲೀ. ಲಘು ಪೋಷಕಾಂಶ ದ್ರಾವಣವನ್ನು ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು.
    ಬಾರಿ ಬಾರಿ ಮಳೆ ಹಾಗೂ ಬಿಸಿಲು ವಾತಾವರಣ ಇದ್ದಲ್ಲಿ ಶೇಂಗಾ ಬೆಳೆಯಲ್ಲಿ ಬುಡ ಕೊಳೆ ರೋಗ ಕಂಡುಬರುತ್ತದೆ. ಹತೋಟಿಗಾಗಿ 2ಗ್ರಾಂ. ಕಾರ್ಬನ್ ಡೇಜಿಂ ಪ್ರತಿ ಲೀ. ನೀರಿಗೆ ಬೆರೆಸಿ ದ್ರಾವಣವನ್ನು ರೋಗಪೀಡಿತ ಬೆಳೆಗಳ ಬುಡಕ್ಕೆ ಸುರಿಯಬೇಕು.
    ಶೇಂಗಾ ಬಿತ್ತುವಾಗ ಜಿಪ್ಸಂ ಹಾಕಿಲ್ಲದಿದ್ದಲ್ಲಿ, 30 ದಿನದೊಳಗಾಗಿ 2ಕ್ವಿಂ. ಜಿಪ್ಸಂ ಅನ್ನು ಪ್ರತಿ ಎಕರೆಗೆ ಮಣ್ಣಿನಲ್ಲಿ ಬೆರೆಸಿ ಎಡೆ ಹೊಡೆದು ದಿಂಡು ಏರಿಸಬೇಕು. ತೊಗರಿ ಬೆಳೆಯಲ್ಲಿ ನೀರು ನಿಲ್ಲದಂತೆ ಬಸಿದು ತೆಗೆಯಬೇಕು. ಇಲ್ಲದಿದ್ದಲ್ಲಿ ಸಿಡಿ
    ರೋಗ ಬರುವ ಸಾಧ್ಯತೆ ಇರುತ್ತದೆ. ಸಿಡಿ ರೋಗ ಬಾಧಿತ ಒಣಗಿದ ಗಿಡಗಳನ್ನು ಕಿತ್ತು ನಾಶಪಡಿಸಬೇಕು. ಇತರೆ ಪ್ರದೇಶಕ್ಕೆ ಹರಡದಂತೆ 1ಗ್ರಾಂ. ಕಾರ್ಬನ್‌ಡೇಜಿಂ ಪ್ರತಿ ಲೀಟರಿಗೆ ಬೆರೆಸಿ ರೋಗ ಪೀಡಿತ ಪ್ರದೇಶದಲ್ಲಿ ಹಾಕಬೇಕು.
    ಹತ್ತಿ ಬೆಳೆಯಲ್ಲಿ ಕರಿ ಹೇನು ಬಾಧೆ ಕಂಡುಬಂದಲ್ಲಿ ಹತೋಟಿಗೆ ಒಂದು ಮಿ.ಲೀ. ಅಸಿಟಮಿಪ್ರಿಡ್ 3ಲೀ. ನೀರಿಗೆ ಅಥವಾ ಒಂದು ಮಿಲೀ ಇಮಿಡಕ್ಲೋಪ್ರಿಡ್ ಪ್ರತಿ ಲೀ. ನೀರಿಗೆ ಬೆರೆಸಿ ಸಿಂಪಡಿಸಬೇಕು. ಎಲೆ ಕೆಂಪಾಗುವುದು ಕಂಡುಬಂದಲ್ಲಿ, ಶೇ.2ರ ಡಿಎಪಿ ರಸಗೊಬ್ಬರದ ದ್ರಾವಣವನ್ನು ಪ್ರತಿ ಎಕರೆಗೆ 200 ಲೀ.ನಂತೆ ಸಿಂಪರಿಸಬೇಕು. ಬೆಳೆಯಲ್ಲಿ ಎಡೆ ಹೊಡೆದು ಸಾಲುಗಳಿಗೆ ದಿಂಡು ಏರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts