ಚಿತ್ರದುರ್ಗ: ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸಿಐಟಿಯು, ಸಿಡಬ್ಲ್ಯೂಎಫ್ಐ ಕಾರ್ಯಕರ್ತರು, ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಅರ್ಹರಿಗೆ ಕಳೆದ 2 ವರ್ಷಗಳಿಂದ ಶೈಕ್ಷಣಿಕ ಸಹಾಯಧನ ಕೈಸೇರಿಲ್ಲ. ಹೀಗಾಗಿ ತ್ವರಿತವಾಗಿ ಬಿಡುಗಡೆಗೊಳಿಸಬೇಕು. 2023-24ನೇ ಸಾಲಿನಲ್ಲಿ ಈ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಬೇಕು. ಮಂಡಳಿಯ ಸೆಸ್ ಹಣದಲ್ಲಿ ಟ್ಯಾಬ್, ಲ್ಯಾಪ್ಟಾಪ್ ಸೇರಿ ಯಾವುದೇ ವಸ್ತುಗಳನ್ನು ಖರೀದಿಸಬಾರದು. ಹಿಂದಿನ ಸರ್ಕಾರದ ಅವಧಿಯಲ್ಲಿ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಸಮಿತಿ ರಚಿಸಬೇಕು. ಭ್ರಷ್ಟರ ವಿರುದ್ಧ ಕಠಿಣ ಕಾನೂನು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಸಿ.ಕೆ.ಗೌಸ್ಪೀರ್, ರಂಗಸ್ವಾಮಿ, ಬಿ.ಸಿ.ನಾಗರಾಜಾಚಾರಿ, ಜಿಕ್ರಿಯಾವುಲ್ಲಾ ಇತರರಿದ್ದರು.