ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಲಘುವಾಗಿ ಮತ್ತು ಪ್ರಚೋದನಾಕಾರಿ ಹೇಳಿಕೆ ನೀಡಿದ ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಶಿಕಾರಿಪುರ ತಾಲೂಕು ಕಾಂಗ್ರೆಸ್ನಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಸಚಿವ ಸ್ಥಾನದಲ್ಲಿರುವ ಅಶ್ವತ್ಥ ನಾರಾಯಣ ಒಬ್ಬ ಮಾಜಿ ಮುಖ್ಯ ಮಂತ್ರಿ, ವಿಧಾನಸಭೆ ಪ್ರತಿಪಕ್ಷದ ನಾಯಕರ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಬೇಕು. ಅವರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸುತ್ತದೆ ಎಂದು ಕೆಪಿಸಿಸಿ ಸದಸ್ಯ ಗೋಣಿ ಮಾಲತೇಶ್ ಹೇಳಿದರು.
ಬಿಜೆಪಿ ಮುಖಂಡರು ತಮ್ಮ ಆಡಳಿತದ ವೈಫಲ್ಯ ಮುಚ್ಚಿಹಾಕಲು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬರುವ ಚುನಾವಣೆಯಲ್ಲಿ ರಾಜ್ಯದ ಅವರಿಗೆ ತಕ್ಕ ಉತ್ತರ ನೀಡುತ್ತಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಯಾರೇ ಆಗಲಿ ಬೇಜವಾಬ್ದಾರಿ ಹೇಳಿಕೆ ನೀಡಬಾರದು. ರಾಜಕೀಯ ಕ್ಷೇತ್ರದಲ್ಲಿ ಪರಸ್ಪರ ಆರೋಪ, ಟೀಕೆ-ಟಿಪ್ಪಣೀ ಸಹಜ. ಆದರೆ ಹೇಳಿಕೆಗಳು ಹದ್ದು ಮೀರಬಾರದು. ಚುನಾವಣೆ ದೃಷ್ಟಿಯಿಂದ ಮಾತನಾಡುವದು ಸರಿಯಲ್ಲ ಎಂದು ಹೇಳಿದರು