ರಾಯಬಾಗ: ಚಳಿಗಾಲದ ಅಧಿವೇಶನದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಮಂಡಿಸಿ ಕೇಂದ್ರ ಸರ್ಕಾರಕ್ಕೆ ಶಿಾರಸು ಮಾಡಿ ಅನುಷ್ಠಾನಗೊಳಿಸುವಂತೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟ ಡಿ.17 ರಂದು ಹುಬ್ಬಳ್ಳಿಯಿಂದ ಬೆಳಗಾವಿ ಸುವರ್ಣಸೌಧದ ವರೆಗೆ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಸಮುದಾಯ ಮುಖಂಡ ವಿನಯನಿಧಿ ಕಮಲ ಕರೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದ ಮುಖಂಡರು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಆಗ್ರಹಿಸಿದರು.
ನ್ಯಾಯಮೂರ್ತಿ ಎ.ಜೆ.ಸದಾಶಿವ ಮತ್ತು ನ್ಯಾಯಮೂರ್ತಿ ನಾಗಮೋಹನದಾಸ ಆಯೋಗಗಳ ವರದಿಯ ಶಿಫಾರಸ್ಸಿನಂತೆ ಪರಿಶಿಷ್ಟರ ಜನಸಂಖ್ಯೆ ಆಧಾರಿತ ಒಳಮೀಸಲಾತಿ ವರ್ಗಿಕರಣಕ್ಕಾಗಿ ಚಳಿಗಾಲ ಅಧಿವೇಶನದಲ್ಲಿ ಮಸೂದೆ ಮಂಡಿಸಬೇಕು. ಮೂರು ದಶಕಗಳಿಂದ ನಿರಂತರ ಹೋರಾಟ ನಡೆಸಲಾಗುತ್ತಿದ್ದರೂ, ವರದಿ ಜಾರಿ ಮಾಡುತ್ತಿಲ್ಲ. ನಮ್ಮ ಬೇಡಿಕೆ ಈಡೇರಿಸದಿದ್ದರೆ ಬರುವ ವಿಧಾನಸಭೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸುವುದಾಗಿ ಎಚ್ಚರಿಸಿದರು.
ಸಂಜೀವ ಮೈಶಾಳೆ, ರಾಜು ಮೈಶಾಳೆ, ಉದಯ ರೆಡ್ಡಿ, ಅನಿಲ ಮೈಶಾಳೆ, ರಿತೇಶ ಅವಳೆ, ಜಿ.ಎನ್.ಜಗನ್ನಾಥ, ಉಮೇಶ ಪೂಜಾರಿ, ಕುಮಾರ ಮರಭೀಮಗೋಳ, ಪ್ರಲ್ಲಾದ ದೇವರುಷಿ, ರಾಘವೇಂದ್ರ ಅವಳೆ ಇತರರಿದ್ದರು.